ಮೂಡಿಗೆರೆ: ಕರಾವಳಿಯಲ್ಲಿ ಬಿಜೆಪಿಯವರು ಆತಂಕ ಸೃಷ್ಟಿಸುತ್ತಿದ್ದಾರೆ. ಬಿಜೆಪಿಯವರೇನು ಹಿಂದುತ್ವ ಗುತ್ತಿಗೆ ತೆಗೆದುಕೊಂಡಿದ್ದಾರಾ. ನಾವೆಲ್ಲ ಹಿಂದೂಗಳಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರಾವಳಿಯಲ್ಲಿ ವ್ಯಕ್ತಿ ಸತ್ತಿರುವುದಕ್ಕೆ ಸರ್ಕಾರಕ್ಕೆ ಅನುಕಂಪ ಇದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಮೃತನ ಕುಟುಂಬಕ್ಕೆ ಸಾಂತ್ವನ ಹೇಳುವ, ಪರಿಹಾರ ನೀಡುವ ಕೆಲಸ ಮಾಡಿದ್ದೇವೆ. ಬಿಜೆಪಿಯವರು ಹಿಂದೂ ವ್ಯಕ್ತಿ ಸತ್ತಿದ್ದಾರೆ ಎಂದು ಅಲ್ಲಿ ಗಲಾಟೆ ಮಾಡಿದ್ದಾರೆ’ ಎಂದರು.
‘ಕೋಮುವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಿಎಫ್ಐ, ಬಜರಂಗದಳ, ಪ್ರಮೋದ್ ಮುತಾಲಿಕ್ ಅವರ ಶ್ರೀರಾಮಸೇನೆ ಯಾವುದೇ ಸಂಘಟನೆ ಇರಬಹುದು. ಒಟ್ಟಾರೆ ಧರ್ಮದ ಹೆಸರಿನಲ್ಲಿ ಕೋಮುಭಾವನೆ ಕೆರಳಿಸುವ, ಗಲಭೆ ಸೃಷ್ಟಿಸುವ ಸಂಘಟನೆಗಳ ವಿರುದ್ಧ ಉಗ್ರ ಕ್ರಮ ಜರುಗಿಸುತ್ತೇವೆ. ಸಂಘಟನೆ ನಿಷೇಧಿಸುವುದೂ ಒಂದು ಕ್ರಮ. ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ’ ಎಂದು ಪ್ರತಿಕ್ರಿಯಿಸಿದರು.
‘ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವ ಇಲ್ಲ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.