ಮೈಸೂರು: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಯಲ್ಲಿ ಕೆಲವು ಬಿಜೆಪಿ ನಾಯಕರ ಕೈವಾಡವಿದೆ ಎಂಬ ಮಾಹಿತಿ ತನಗೆ ಲಭ್ಯವಾಗಿರುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೋಮವಾರ ಇಲ್ಲಿ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ದೀಪಕ್ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಕೊಲೆಯ ಕಾರಣವನ್ನು ಸರ್ಕಾರ ಮುಚ್ಚಿಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಹೊಂದಾಣಿಕೆ ನಡೆದಿದೆ ಎಂಬ ಅನುಮಾನ ನನ್ನನ್ನು ಕಾಡುತ್ತಿದೆ’ ಎಂದು ತಿಳಿಸಿದರು.
ಬಿಜೆಪಿ ನಾಯಕರ ಹೆಸರನ್ನು ಬಹಿರಂಗಪಡಿಸುವಂತೆ ಕೇಳಿದಾಗ, ‘ಬಿಜೆಪಿಯ ಕಾರ್ಪೊರೇಟರ್ ಒಬ್ಬರು ಕೊಲೆಯ ಹಿಂದೆ ಇದ್ದಾರೆ ಎಂಬ ಮಾಹಿತಿ ನನಗೆ ಲಭ್ಯವಾಗಿದೆ. ಅದು ನಿಜವೋ, ಸುಳ್ಳೋ ಎಂಬುದನ್ನು ಸರ್ಕಾರ ಹೇಳಬೇಕು. ಆರೋಪಿಗಳನ್ನು ಬಂಧಿಸಿ ಹಲವು ದಿನಗಳು ಕಳೆದರೂ ಸತ್ಯಾಸತ್ಯತೆ ಹೊರಗೆಳೆಯಲು ಸರ್ಕಾರಕ್ಕೆ ಆಗಿಲ್ಲ’ ಎಂದರು.
ಎತ್ತಿನಹೊಳೆ ಯೋಜನೆ ವಿರೋಧಿಸಿಲ್ಲ: ‘ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುತ್ತೇನೆ ಅಥವಾ ಬಯಲು ಸೀಮೆಗೆ ನೀರು ಕೊಡುವುದನ್ನು ವಿರೋಧಿಸುತ್ತಿರುವುದಾಗಿ ಎಲ್ಲೂ ಹೇಳಿಲ್ಲ’ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
‘ಎತ್ತಿನಹೊಳೆ ಯೋಜನೆಯಲ್ಲಿ ಆಗಿರುವ ಅಕ್ರಮವೂ ಒಳಗೊಂಡಂತೆ ರಾಜ್ಯದಲ್ಲಿ ಹಲವಾರು ಯೋಜನೆಗಳ ಹೆಸರಿನಲ್ಲಿ ಸರ್ಕಾರ ಅಕ್ರಮ ನಡೆಸಿದೆ. ಈ ಎಲ್ಲವನ್ನೂ ನಿಲ್ಲಿಸುತ್ತೇನೆ ಎಂಬ ಮಾತನ್ನು ಹೇಳಿದ್ದೆ. ಯೋಜನೆಯನ್ನೇ ನಿಲ್ಲಿಸಬೇಕು ಎಂದು ಎಲ್ಲೂ ಹೇಳಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.