ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ಕೆಆರ್ಎಸ್ ಜಲಾಶಯದಿಂದ ಬೇಸಿಗೆ ಬೆಳೆ ಬೆಳೆಯಲು ನಾಲೆಗಳ ಮೂಲಕ ಕೃಷಿ ಜಮೀನಿಗೆ ನೀರು ಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ರೈತ ಸಂಘದ ಸಂಚಾಲನಾ ಸಮಿತಿ ಹಾಗೂ ಕರವೇ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಇಲ್ಲಿನ ಮಿನಿ ವಿಧಾನಸೌಧ ಎದುರು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ಧರಣಿ ನಡೆಸಿದರು. ಧರಣಿ ನಿರತರು ರಾಜ್ಯದ ಕಾಂಗ್ರೆಸ್ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಸಂಜೆ ವೇಳೆಗೆ ಇಲ್ಲಿಗೆ ಬಂದು ಕೆಲಕಾಲ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.
‘ಕೆಆರ್ಎಸ್ ಅಚ್ಚುಕಟ್ಟು ಪ್ರದೇಶದ ರೈತರು ಸತತವಾಗಿ ಮೂರು ಬೆಳೆ ಕಳೆದುಕೊಂಡಿದ್ದಾರೆ. ಕಳೆದ ಮುಂಗಾರು ಹಂಗಾಮಿನಲ್ಲಿ ಜಲಾಶಯದಲ್ಲಿ ಸಾಕಷ್ಟು ನೀರು ಲಭ್ಯ ಇದ್ದರೂ ಸರ್ಕಾರವೇ ಕೃತಕ ಬರ ಸೃಷ್ಟಿಸಿ ರೈತರಿಗೆ ದ್ರೋಹ ಬಗೆದಿದೆ. ಸಹಸ್ರಾರು ಎಕರೆ ಕೃಷಿ ಭೂಮಿ ಪಾಳು ಬಿದ್ದಿದೆ. ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ ಆರೋಪಿಸಿದರು.
‘ಸಹಜ ಬರದಿಂದ ಎರಡು ಬೆಳೆ ಹಾಗೂ ಕೃತಕ ಬರದಿಂದ ಒಂದು ಬೆಳೆ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ತೀವ್ರ ಬರದಿಂದಾಗಿ ತಾಲ್ಲೂಕಿನಲ್ಲಿ 7966 ರೈತರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು ತಾಲ್ಲೂಕು ಆಡಳಿತವೇ ಹೇಳಿದೆ. ಎಲ್ಲ ರೈತರಿಗೆ ಶೀಘ್ರ ಪರಿಹಾರ ನೀಡಬೇಕು’ ಎಂದು ಮಂಜೇಶ್ ಗೌಡ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.