ಶಿರಸಿ: ನಗರದಲ್ಲಿ ಡಿ.12ರಂದು ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದ 62 ಜನರ ಜಾಮೀನು ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ನ್ಯಾಯಾಲಯ ತಿರಸ್ಕರಿಸಿದೆ.
ಘಟನೆ ನಡೆದ ದಿನ ಬಂಧಿತರಾಗಿ ಧಾರವಾಡ ಜೈಲಿಗೆ ಹೋಗಿದ್ದ 62 ಮಂದಿಗೆ, ಎರಡು ದಿನಗಳ ನಂತರ 1ನೇ ಹೆಚ್ಚುವರಿ ನ್ಯಾಯಾಲಯವು ಕೆಲವು ಷರತ್ತಿನೊಂದಿಗೆ (ಊರು ಬಿಟ್ಟು ಹೋಗುವಂತಿಲ್ಲ, ಪ್ರತಿದಿನ ಪೊಲೀಸ್ ಠಾಣೆಗೆ ಬಂದು ಸಹಿ ಮಾಡಬೇಕು) ಮಧ್ಯಂತರ ಜಾಮೀನು ನೀಡಿತ್ತು. ಮಂಗಳವಾರ ಪ್ರಕರಣದ ಮುಂದಿನ ವಿಚಾರಣೆ ನಡೆಸಿದ ನ್ಯಾಯಾಲಯವು, ಷರತ್ತನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಆರೋಪಿಗಳ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ. ಹೀಗಾಗಿ ಅವರೆಲ್ಲರನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ.
‘ಆರೋಪಿಗಳಿಗೆ ಮಧ್ಯಂತರ ಜಾಮೀನು ದೊರೆತ ಮೇಲೆ ಪೊಲೀಸರು ಹೆಚ್ಚುವರಿ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಲು ಬಾಡಿ ವಾರಂಟ್ ಪಡೆದುಕೊಂಡಿದ್ದರು. ಪೊಲೀಸ್ ಠಾಣೆಗೆ ಸಹಿ ಮಾಡಿಲು ಹೋದರೆ ಬಂಧಿಸಬಹುದು ಎಂಬ ಭಯದಿಂದ ಮೇಲೆ ಅವರು ತಲೆಮರೆಸಿಕೊಂಡಿದ್ದರು. ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ತಿರಸ್ಕೃತವಾಗಿರುವುದರಿಂದ ಹೈಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ’ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.