ADVERTISEMENT

ದಲಿತ ಮುಖ್ಯಮಂತ್ರಿ ಕಾಂಗ್ರೆಸ್‌ ಒಲವು?

ಕಾಂಗ್ರೆಸ್‌ ವಲಯದಲ್ಲಿ ವದಂತಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ದಲಿತ ನಾಯಕರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ಊಹಾಪೋಹ ಕಾಂಗ್ರೆಸ್‌ ವಲಯದಲ್ಲಿ ಹರಿದಾಡ ತೊಡಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳು. ಇಬ್ಬರೂ ದಲಿತ ಸಮುದಾಯದ ಬಲಗೈ ಬಣಕ್ಕೆ ಸೇರಿದವರು.

2013ರಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ನಾಯಕನ ಆಯ್ಕೆ ವೇಳೆ ಸಿದ್ದರಾಮಯ್ಯ ಪರ ಒಲವು ವ್ಯಕ್ತವಾಗಿದ್ದರಿಂದ ಖರ್ಗೆ ಅವಕಾಶ ಕಳೆದುಕೊಂಡಿದ್ದರು. ಕೊರಟಗೆರೆಯಲ್ಲಿ ಸೋಲು ಕಂಡಿದ್ದರಿಂದ ಪರಮೇಶ್ವರ ಹುದ್ದೆಗೆ ಅಹವಾಲು ಸಲ್ಲಿಸಿರಲಿಲ್ಲ.

ADVERTISEMENT

‘ಖರ್ಗೆ ಮತ್ತು ಪರಮೇಶ್ವರ ಇಬ್ಬರೂ ಪಕ್ಷ ನಿಷ್ಠರು. ಈ ಇಬ್ಬರ ಪೈಕಿ ಒಬ್ಬರನ್ನು ಮುಖ್ಯಮಂತ್ರಿ ಮಾಡುವ ಮೂಲಕ ದಲಿತರನ್ನು ಓಲೈಸುವುದಲ್ಲದೆ, ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರು ಎಂಬ ತಾರತಮ್ಯ ನಿವಾರಿಸಲು ಅವಕಾಶ ಇದೆ’ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದರು.

‘ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಮುಂದಿನ ಚುನಾವಣೆ ಎದುರಿಸಲಿದೆ. ಈ ವಿಷಯದಲ್ಲಿ ಯಾವುದೇ ಸಂದೇಹ ಇಲ್ಲ. ಆದರೆ, ಖರ್ಗೆ ಕೂಡಾ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ’ ಎಂದು ಎಐಸಿಸಿ ಕಾರ್ಯದರ್ಶಿಯೊಬ್ಬರು ತಿಳಿಸಿದರು.

ತಮ್ಮ ಆಪ್ತರಾದ ಲೋಕೋಪಯೋಗಿ ಸಚಿವ ಎಚ್‌.ಸಿ. ಮಹದೇವಪ್ಪ ಕೂಡಾ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ವದಂತಿಗೆ ಪೂರಕವಾಗಿದೆ. ಮಹದೇವಪ್ಪ ಕೂಡಾ ದಲಿತ ಸಮುದಾಯದ ಬಲಗೈ ಬಣಕ್ಕೆ ಸೇರಿದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.