ADVERTISEMENT

ಹಾಸನ: ಶಾಂತಿಗ್ರಾಮ ಬಳಿ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ; ಎಂಟು ಮಂದಿ ದುರ್ಮರಣ

​ಪ್ರಜಾವಾಣಿ ವಾರ್ತೆ
Published 13 ಜನವರಿ 2018, 10:28 IST
Last Updated 13 ಜನವರಿ 2018, 10:28 IST
ಆಪಘಾತಕ್ಕೀಡಾದ ಕೆಎಸ್‌ಆರ್‌ಟಿಸಿ ಬಸ್‌
ಆಪಘಾತಕ್ಕೀಡಾದ ಕೆಎಸ್‌ಆರ್‌ಟಿಸಿ ಬಸ್‌   

ಹಾಸನ: ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಬದಿಯ ಹಳ್ಳಕ್ಕೆ ಐರಾವತ ಬಸ್ ಪಲ್ಟಿಯಾಗಿ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ. 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಬೆಳ್ತಂಗಡಿಯ ಬಿಜೋ(26), ಡಯಾನ(20), ಸೋನಿಯಾ(28), ಧರ್ಮಸ್ಥಳದ ರಾಕೇಶ್ ಪ್ರಭು(26), ಬೆಂಗಳೂರಿನ ಗಂಗಾಧರ್(55), ಚಾಲಕ/ನಿರ್ವಾಹಕ ಶಿವಪ್ಪ ಛಲವಾದಿ(40), ಚಾಲಕ/ನಿರ್ವಾಹಕ ಲಕ್ಷ್ಮಣ್(45) ಮೃತಪಟ್ಟವರು. ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ  ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಹಾಸನದ ಕೃಷಿ ಕಾಲೇಜು ಬಳಿ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಎಡ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.

ADVERTISEMENT

ದುರಂತಕ್ಕೆ ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತೀವ್ರ ಕಳವಳ

ಶಾಂತಿಗ್ರಾಮದ ಬಳಿ ಸಾರಿಗೆ ಬಸ್ ಅಪಘಾತಕ್ಕೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದು, ಸ್ಥಳಕ್ಕೆ ತೆರಳಲು ಹಿರಿಯ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.