ADVERTISEMENT

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2018, 8:39 IST
Last Updated 21 ಜನವರಿ 2018, 8:39 IST
ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ
ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ   

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಸಿದ್ದನಬಾವಿ, ಬೇಡಿಗೇರಿ ಮತ್ತು ಮುತ್ನಾಳ ಗ್ರಾಮಗಳ ಕೆರೆಗಳಿಗೆ ಮಲಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆಯ ಪೂಜಾ ಕಾರ್ಯಕ್ರಮ, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಜಟಾಪಟಿಯಿಂದಾಗಿ ಗೊಂದಲದ ಗೂಡಾಯಿತು.

ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಸಂಜಯ ಪಾಟೀಲ‌ ಶಾಸಕರಾಗಿದ್ದಾರೆ. ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಬೆಂಬಲಿಗರ ನಡುವೆ ತಳ್ಳಾಟ ನೂಕಾಟ ನಡೆಯಿತು.

ಈ ಯೋಜನೆಯ ಲಾಭ ನಮ್ಮ ಪಕ್ಷಕ್ಕೆ ಸಲ್ಲಬೇಕೆಂದು ಎರಡೂ ಪಕ್ಷಗಳ ಕಾರ್ಯಕರ್ತರು ಜಟಾಪಟಿ ನಡೆಸಿದರು.

ADVERTISEMENT

ಬಿಜೆಪಿ ಕಾರ್ಯಕರ್ತರು ಮೋದಿ.. ಮೋದಿ ಎಂದು ಘೋಷಣೆ ಕೂಗಿದರೆ, ಕಾಂಗ್ರೆಸ್ ಕಾರ್ಯಕರ್ತರು ಅಕ್ಕ.. ಅಕ್ಕ.. ಎಂದು ಘೋಷಣೆ ಕೂಗಿದರು. ಎರಡೂ ಪಕ್ಷಗಳ ನಾಯಕರ ಎದುರೇ ಈ ಪ್ರಹಸನ ನಡೆಯಿತು.

ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಪ್ರಯತ್ನಿಸಿದರು. ಸಂಸದ ಸುರೇಶ ಅಂಗಡಿ, ಶಾಸಕ ಸಂಜಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇದ್ದರು.

ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ನಂತರ ಉಸ್ತುವಾರಿ ಸಚಿವ ಹಾಗೂ ಶಾಸಕರು ತರಾತುರಿಯಲ್ಲಿ ಭೂಮಿಪೂಜೆ ನೆರವೇರಿಸಿ ತೆರಳಿದರು.

ಜಲಸಂಪನ್ಮೂಲ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.