ಬೆಂಗಳೂರು: ಸಿದ್ದಗಂಗಾ ಮಠದ ಮಠಾಧೀಶರಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
600 ವರ್ಷಗಳ ಇತಿಹಾಸ ಹೊಂದಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠ ನಿರಂತರವಾಗಿ ಹಲವು ಮಂದಿ ಸಿದ್ದಪುರುಷರನ್ನು ನಾಡಿಗೆ ನೀಡಿದೆ. 1941 ರಿಂದ ಮಠದ ಜವಾಬ್ದಾರಿ ನಿಭಾಯಿಸುತ್ತಿರುವ ಡಾ.ಶಿವಕುಮಾರ ಸ್ವಾಮೀಜಿ ಎಲ್ಲಾ ಜಾತಿಯ ಬಡವರು, ಹಿಂದುಳಿದ ವರ್ಗದವರ ಶ್ರೇಯಕ್ಕಾಗಿ ಶ್ರಮಿಸುತ್ತಿದ್ದಾರೆ.
ಮಠದ ವತಿಯಿಂದ 130 ಶಿಕ್ಷಣ ಸಂಸ್ಥೆಗಳನ್ನು ತೆರೆಯಲಾಗಿದ್ದು, ಸುಮಾರು 9 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಶಿಕ್ಷಣ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಾಮೀಜಿ ಏಳು ದಶಕಗಳಿಗೂ ಹೆಚ್ಚು ಕಾಲದಿಂದ ಸಮಾಜ ಸೇವೆ, ಶಿಕ್ಷಣ, ಆಧ್ಯಾತ್ಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಏಪ್ರಿಲ್ 01, 1908ರಲ್ಲಿ ಜನಿಸಿರುವ ಸ್ವಾಮೀಜಿ ಅವರ ವಯಸ್ಸು110 ವರ್ಷ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.