ಬೆಂಗಳೂರು: ಮಹದಾಯಿ ಯೋಜನೆ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ಕನ್ನಡ ಸಂಘಟನೆಗಳ ಒಕ್ಕೂಟವು ಗುರುವಾರ ಕರೆನೀಡಿದ್ದ ‘ಕರ್ನಾಟಕ ಬಂದ್’ನಿಂದಾಗಿ ಧಾರವಾಡ, ಗದಗ, ಬೆಂಗಳೂರು ಬೆಳಿಗ್ಗೆಯಿಂದ ಸಂಜೆವರೆಗೂ ಬಹುತೇಕ ಸ್ತಬ್ಧಗೊಂಡಿತ್ತು. ಉಳಿದಂತೆ ರಾಜ್ಯದೆಲ್ಲಡೆ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ, ದಾರವಾಡ, ಗದಗದಲ್ಲಿ ಬಂದ್ ತೀವ್ರ ಕಾವು ಪಡೆದುಕೊಂಡಿತ್ತು. ಮೈಸೂರು ಭಾಗ, ಮಧ್ಯಕರ್ನಾಟಕ, ಕರಾವಳಿ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೋವಾ ಗಡಿ ಭಾಗ ಹೊರತು ಪಡಿಸಿದರೆ ರಾಜ್ಯದ ಉಳಿದ ಗಡಿ ಭಾಗಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಜನರಿಗೆ ಬಂದ್ ಬಿಸಿ ತಟ್ಟಲಾರಂಭಿಸಿತು. ಜನಜೀವನವೂ ಭಾಗಶಃ ಅಸ್ತವ್ಯಸ್ತವಾಗಿತ್ತು.
ಕನ್ನಡ ಸಂಘಟನೆಗಳ ಕಾರ್ಯಕರ್ತರು ಪುರಭವನ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿ ದಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ರಾಜ್ಯದ ಅಲ್ಲಲ್ಲಿ ಕಲ್ಲು ತೂರಾಟ ಪ್ರಕರಣಗಳನ್ನು ಹೊರತುಪಡಿಸಿದ್ದಾರೆ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.