ಬೆಂಗಳೂರು: ಮಹದಾಯಿ ನದಿ ನೀರಿನ ವಿಷಯ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದು, ಇನ್ನೂ ಎರಡು ಅಥವಾ ಮೂರು ಬಂದ್ಗಳು ನಡೆಯುವ ಸಾಧ್ಯತೆ ಇದೆ.
ಮಹದಾಯಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿಲುವು ಸ್ಪಷ್ಟಪಡಿಸಬೇಕು
ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳು ಗುರುವಾರ ಬಂದ್ಗೆ ಕರೆ ನೀಡಿದ್ದವು. ಮೈಸೂರಿನಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶಕ್ಕೆ ಭಂಗ ತರಲು ರಾಜ್ಯ ಸರ್ಕಾರವೇ ಈ ಬಂದ್ ಪ್ರಾಯೋಜಿಸಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಫೆಬ್ರುವರಿ 4ರಂದು ಬೆಂಗಳೂರಲ್ಲಿ ನಡೆಯಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮಕ್ಕೆ ಜನ ಬರದಂತೆ ತಡೆಯಲು ಮತ್ತೊಂದು ಬಂದ್ಗೆ ಕರೆ ನೀಡುವ ಯತ್ನ ನಡೆಯುತ್ತಿದೆ. ಹಾಗೊಂದು ವೇಳೆ ಬಂದ್ಗೆ ಕರೆ ನೀಡಿದರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮದ ವೇಳೆ ಆಯಾ ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
‘ಫೆ.4ರಂದು ಬಂದ್ಗೆ ನಾವು ಕರೆ ನೀಡುವುದಿಲ್ಲ. ಮಹದಾಯಿ ನೀರಿನ ವಿಷಯಕ್ಕೆ ಬೇರೆ ಯಾರಾದರೂ ಅದೇ ದಿನ ಬಂದ್ಗೆ ಕರೆ ನೀಡಿದರೆ ರಾಜ್ಯದ ಹಿತದೃಷ್ಟಿಯಿಂದ ಬೆಂಬಲಿಸಬೇಕಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.