ADVERTISEMENT

ಮಹಾಮಸ್ತಕಾಭಿಷೇಕ, ಪೊಲೀಸ್ ಇಲಾಖೆ ಸನ್ನದ್ಧ: ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 9:54 IST
Last Updated 30 ಜನವರಿ 2018, 9:54 IST
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಸಭೆ ನಡೆಸಿದರು.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಸಭೆ ನಡೆಸಿದರು.   

ಶ್ರವಣಬೆಳಗೊಳ: ಇಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಆಚರಣೆ ಸುಗಮ‌ವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಹೇಳಿದರು.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಅವರು, ‘ಮಸ್ತಕಾಭಿಷೇಕದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾದ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಭಕ್ತರು, ಪ್ರವಾಸಿಗರ ಸಂಖ್ಯೆ ಆಧರಿಸಿ ಪೊಲೀಸ್ ನಿಯೋಜನೆ ಮಾಡಲಾಗುವುದು. ಯಾತ್ರಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿಯಲ್ಲಿ ಮಾಹಿತಿ ರವಾನಿಸಲಾಗುವುದು. ಕಣ್ಗಾವಲಿಗಾಗಿ ಸಿಸಿಟಿವಿ ಕ್ಯಾಮರಾ, ಬೈನಾಕ್ಯುಲರ್ ಅಳವಡಿಸಲಾಗುವುದು’ ಎಂದು ಹೇಳಿದರು.

ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ, ಪ್ರಧಾನಿ ಆಗಮನದ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೂ ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಮಸ್ತಕಾಭಿಷೇಕ ಸಂದರ್ಭ ಡ್ರೋಣ್ ಕ್ಯಾಮರಾ ‌ಬಳಕೆ ನಿಷೇಧಿಸಲಾಗಿದೆ. ಅವಶ್ಯಕತೆ ಇದ್ದರೆ ಮಾತ್ರ ಬಳಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ನಿಧನ: ಮಸ್ತಕಾಭಿಷೇಕದ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ರಂಗಸ್ವಾಮಿ (58)  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶ್ರವಣಬೆಳಗೊಳದ ಕಳಸಾ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಕುಸಿದುಬಿದ್ದ ಅವರು ಮೃತಪಟ್ಟಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.