ADVERTISEMENT

ಭೇಟಿಗೆ ಸಮಯ ಕೇಳಿದ ತಮಿಳುನಾಡು ಸಿ.ಎಂ

ಕಾವೇರಿ ನೀರು ಬಿಡುಗಡೆ: ಸಿದ್ದರಾಮಯ್ಯಗೆ ಪಳನಿಸ್ವಾಮಿ ಪತ್ರ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 19:30 IST
Last Updated 30 ಜನವರಿ 2018, 19:30 IST

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಮನವಿ ಮಾಡಲು ತಾವು ಕರ್ನಾಟಕಕ್ಕೆ ಬರಲಿದ್ದು ಭೇಟಿಗೆ ಸಮಯ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿ ರತ್ನಪ್ರಭಾಗೆ ಮಂಗಳವಾರ ಪಳನಿಸ್ವಾಮಿ ಪತ್ರ ತಲುಪಿದೆ. ಆದರೆ, ಭೇಟಿಗೆ ಇನ್ನು ಸಮಯ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ರಾಜ್ಯದಲ್ಲೇ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆ ಉದ್ಭವಿಸದು. ಈ ಬಗ್ಗೆ ಮುಖ್ಯಮಂತ್ರಿ ಇನ್ನೂ ನಿರ್ಣಯ ತೆಗೆದು
ಕೊಂಡಿಲ್ಲ. ಈಗಲೇ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಕಡಿಮೆ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ಮೆಟ್ಟೂರು ಅಣೆಕಟ್ಟೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಕೃಷಿ ಕಾರ್ಯಗಳಿಗೆ ತೊಂದರೆ ಆಗಿದೆ. ಆದ್ದರಿಂದ ತಕ್ಷಣವೇ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೂ ಪಳನಿಸ್ವಾಮಿ ಈಗಾಗಲೇ ಪತ್ರ ಬರೆದಿದ್ದಾರೆ.

ಈ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಮನವಿ ಮಾಡಲು ಪಳನಿಸ್ವಾಮಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಳನಿಸ್ವಾಮಿ ಜತೆಗೆ ಸಚಿವರು ಮತ್ತು ತಜ್ಞರ ತಂಡ ರಾಜ್ಯಕ್ಕೆ  ಭೇಟಿ ನೀಡಲು ಸಿದ್ಧತೆ ನಡೆಸಿದೆ. ಈ ಸಂಬಂಧ ಮಂಗಳವಾರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಓ.ಪನ್ನೀರಸೆಲ್ವಂ ಭಾಗವಹಿಸಿದ್ದರು. ಬಳಿಕ ಸಿದ್ದರಾಮಯ್ಯ ಅವರಿಗೆ ಪತ್ರ ಕಳುಹಿಸಲಾಯಿತು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.