ADVERTISEMENT

ಕಾವ್ಯಾ ಪೂಜಾರಿ ಸಾವಿನ ಪ್ರಕರಣ ಸಿಬಿಐಗೆ: ಮುಖ್ಯ ಕಾರ್ಯದರ್ಶಿಗೆ ಕೇಂದ್ರದಿಂದ ಪತ್ರ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 19:30 IST
Last Updated 3 ಫೆಬ್ರುವರಿ 2018, 19:30 IST

ತುಮಕೂರು: ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ 2017ರ ಜುಲೈನಲ್ಲಿ ಮೃತಪಟ್ಟ ಕಾವ್ಯಾ ಪೂಜಾರಿ ಪ್ರಕರಣವನ್ನು ಸಿಬಿಐಗೆ ವಹಿಸಲು ಸೂಕ್ತ ಕ್ರಮಕೈಗೊಳ್ಳಿ ಎಂದು ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಪಿ.ಆರ್.ತ್ರಿಪಾಠಿ ಅವರು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

‘ಈ ಸಾವು ಅನುಮಾನಾಸ್ಪದವಾಗಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ರಾಜ್ಯ ಗೃಹ ಇಲಾಖೆಗೆ ಎರಡು ಬಾರಿ ಪತ್ರ ಬರೆದು ಕೋರಿದ್ದೆವು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ಸ್ಥಳೀಯ ಪೊಲೀಸರು ಆಳ್ವಾಸ್ ಸಂಸ್ಥೆಯ ಜತೆ ಶಾಮೀಲಾಗಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಲು ಕ್ರಮಕೈಗೊಳ್ಳಬೇಕು’ ಎಂದು ನಗರದ ಮಾನವ ಹಕ್ಕು ಹೋರಾಟಗಾರ ಎಸ್.ಸಾದಿಕ್ ಪಾಷಾ ಅವರು ರಾಷ್ಟೀಯ ಮಾನವ ಹಕ್ಕುಗಳ ಆಯೋಗ ಮತ್ತು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು.

‘ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇಲ್ಲಿಯವರೆಗೂ 16 ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆದರೆ ಯಾವ ಪ್ರಕರಣಕ್ಕೂ ನ್ಯಾಯ ಸಿಕ್ಕಿಲ್ಲ. ಪೊಲೀಸರು ಕಾವ್ಯಾ ಪೂಜಾರಿ ಪ್ರಕರಣವನ್ನು ಸೂಕ್ತ ರೀತಿ ತನಿಖೆ ನಡೆಸಿಲ್ಲ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ಈ ಹಿಂದೆ ನಡೆದ ಸಾವುಗಳ ಬಗ್ಗೆಯೂ ಸತ್ಯಾಸತ್ಯತೆಯನ್ನು ಬಯಲುಗೊಳಿಸಬಹುದು’ ಎಂದು ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.