ಮಂಡ್ಯ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ’ ಎಂದು ಐದು ರೂಪಾಯಿ ವೈದ್ಯ ಎಂದೇ ಖ್ಯಾತರಾಗಿರುವ ಚರ್ಮರೋಗ ತಜ್ಞ ಶಂಕರೇಗೌಡ ಹೇಳಿದರು.
‘ಜೆಡಿಎಸ್ನಿಂದ ಸ್ಪರ್ಧಿಸಲು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ಎರಡು ಬಾರಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಸಂಸದ ಸಿ.ಎಸ್.ಪುಟ್ಟರಾಜು ಅವರೇ ಭೇಟಿ ಮಾಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ನಮ್ಮ ಮನೆಗೆ ಬಂದಿದ್ದ ಕುಮಾರಸ್ವಾಮಿ ಅವರು ಟಿಕೆಟ್ ಕೊಡುವ ಭರವಸೆ ನೀಡಿದ್ದರು. ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ. ಆದರೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಡಾ.ಶಂಕರೇಗೌಡ ಅವರು ನಗರದ ಆರ್.ಪಿ ರಸ್ತೆಯಲ್ಲಿ 1982ರಿಂದ ಕ್ಲಿನಿಕ್ ನಡೆಸುತ್ತಿದ್ದಾರೆ. ₹ 5ಕ್ಕೆ ಚಿಕಿತ್ಸೆ ನೀಡುತ್ತಿದ್ದು, 35 ವರ್ಷಗಳಿಂದ ಒಮ್ಮೆಯೂ ಚಿಕಿತ್ಸೆ ದರ ಬದಲಾವಣೆ ಮಾಡಿಲ್ಲ. ಉತ್ತಮ ರೈತರೂ ಆಗಿದ್ದು, ಪ್ರತಿದಿನ ಬೆಳಿಗ್ಗೆ ತಮ್ಮ ಗ್ರಾಮ ಶಿವಳ್ಳಿಯ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಾರೆ. ಶಿವಳ್ಳಿಯಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ. ಮಧ್ಯಾಹ್ನ 2ರಿಂದ ರಾತ್ರಿ 11ರವರೆಗೂ ನಗರದ ಕ್ಲಿನಿಕ್ನಲ್ಲಿ ಚಿಕಿತ್ಸೆ ನೀಡುತ್ತಾರೆ. ಜನರ ಒತ್ತಾಯದಿಂದ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ, ಜಯಗಳಿಸಿ, ಉಪಾಧ್ಯಕ್ಷರೂ ಆಗಿದ್ದರು.
ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನೀರು ಬಳಕೆದಾರರ ಸಂಘದ ಅಧ್ಯಕ್ಷರೂ ಆಗಿದ್ದು, ನಾಲೆಯ ನೀರಿನ ಸದ್ಬಳಕೆ ಬಗ್ಗೆ ಅರಿವು ಮೂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.