ಬೆಂಗಳೂರು: ‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರತಿ ವರ್ಷ ₹10 ಸಾವಿರ ಕೋಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಭರವಸೆ ನೀಡಿರಲಿಲ್ಲ ಎಂದು ಕೂಡಲ ಸಂಗಮದಲ್ಲಿ ಪ್ರಮಾಣ ಮಾಡಿ’ ಎಂದು ಬಿಜೆಪಿಯ ಬಿ.ಜೆ.ಪುಟ್ಟಸ್ವಾಮಿ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರಿಗೆ ಸವಾಲು ಹಾಕಿದರು.
ವಿಧಾನಪರಿಷತ್ತಿನಲ್ಲಿ ಬುಧವಾರ ಮಾತನಾಡಿದ ಪುಟ್ಟಸ್ವಾಮಿ, ‘ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಮುಕ್ತಾಯಗೊಳಿಸುವಾಗ ಸಿದ್ದರಾಮಯ್ಯ, ಈ ಯೋಜನೆಗೆ ಪ್ರತಿ ವರ್ಷ ₹10 ಸಾವಿರ ಕೋಟಿ ನೀಡುವುದಾಗಿ ಕೂಡಲ ಸಂಗಮದಲ್ಲಿ ಭರವಸೆ ನೀಡಿದ್ದರು. ಆದರೆ, ಸರ್ಕಾರ ಐದು ವರ್ಷಗಳಲ್ಲಿ ಈ ಯೋಜನೆಗೆ ₹12,897 ಕೋಟಿ ಮಾತ್ರ ವೆಚ್ಚ ಮಾಡಿದೆ’ ಎಂದರು.
ಇದಕ್ಕೆ ಉತ್ತರಿಸಿದ ಎಂ.ಬಿ.ಪಾಟೀಲ, ‘ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ₹47,500 ಕೋಟಿ ಬೇಕಾಗುತ್ತದೆ ಎಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಾಜು ಮಾಡಲಾಗಿತ್ತು. ಅದರ ಆಧಾರದಲ್ಲಿ, ನೀರಾವರಿ ಯೋಜನೆಗಳಿಗೆ ಪ್ರತಿವರ್ಷ ₹10ಸಾವಿರ ಕೋಟಿ ಒದಗಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು’ ಎಂದು ತಿಳಿಸಿದರು. ಕಾಂಗ್ರೆಸ್ ಪ್ರಣಾಳಿಕೆ ಹಾಗೂ 2013–14ನೇ ಸಾಲಿನ ಬಜೆಟ್ ಪ್ರತಿಗಳನ್ನು ಅವರು ಪ್ರದರ್ಶಿಸಿದರು.
‘ನೀವು ಈಗ ಮಾತು ಬದಲಿಸಿದ್ದೀರಿ’ ಎಂದು ಪುಟ್ಟಸ್ವಾಮಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.