ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು ಕೇಂದ್ರ ಸರ್ಕಾರ ನಾಲ್ಕು ತಿಂಗಳಿನಿಂದ ನಿಲ್ಲಿಸಿರುವ ಬಗ್ಗೆ ವಿವರಣೆ ನೀಡಬೇಕು ಎಂದು ಬಿಜೆಪಿಯ ಅಮರನಾಥ ಪಾಟೀಲ ಆಗ್ರಹಿಸಿದರು.
‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ಫಲಾನುಭವಿಗಳ ವಿವರ ಕೊಡಲು ಕರ್ನಾಟಕ ವಿಫಲ’ ವರದಿಯನ್ನು ಗುರುವಾರ ವಿಧಾನ ಪರಿಷತ್ತಿನಲ್ಲಿ ಶೂನ್ಯವೇಳೆಯಲ್ಲಿ ಅವರು ಪ್ರಸ್ತಾಪಿಸಿದರು.
ಆಹಾರ ಧಾನ್ಯಗಳ ವಿತರಣೆಯಲ್ಲಿ ಹೆಚ್ಚಿನ ಪಾರದರ್ಶಕ ತರುವ ಉದ್ದೇಶದಿಂದ ಧಾನ್ಯಗಳನ್ನು ಬಳಸುವ ಸಂಸ್ಥೆಗಳು ಹಾಗೂ ಫಲಾನುಭವಿಗಳ ಪಟ್ಟಿ ನೀಡುವಂತೆ ಕೇಂದ್ರ ಸೂಚಿಸಿತ್ತು. ಬಡವರಿಗೆ ನೀಡಬೇಕಿದ್ದ ಆಹಾರ ಧಾನ್ಯಗಳನ್ನು ರಾಜ್ಯ ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸಿದೆ ಎಂಬ ಅನುಮಾನ ಈ ಕ್ರಮಕ್ಕೆ ಕಾರಣವಾಗಿದೆ ಎಂದರು.
ಸಮಾಜ ಕಲ್ಯಾಣ ಯೋಜನೆಗಳ ಅಡಿ ವೃದ್ಧಾಶ್ರಮಗಳು, ಭಿಕ್ಷುಕರ ಪುನರ್ವಸತಿ ಕೇಂದ್ರಗಳು, ನಿರಾಶ್ರಿತರ ಕೇಂದ್ರ ಮತ್ತು ವಿದ್ಯಾರ್ಥಿ ನಿಲಯಗಳಿಗಾಗಿ ಪ್ರತಿ ವರ್ಷ ರಾಜ್ಯಕ್ಕೆ ಕೇಂದ್ರ ಸರ್ಕಾರ 65,714 ಟನ್ ಆಹಾರ ಧಾನ್ಯವನ್ನು ಮಂಜೂರು ಮಾಡುತ್ತಿದೆ. ಧಾನ್ಯ ಪೂರೈಕೆ ಪುನರಾರಂಭಕ್ಕೆ ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತಕ್ಷಣವೇ ಫಲಾನುಭವಿಗಳ ಪಟ್ಟಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.