ಬೆಂಗಳೂರು: ‘ರಾಜಕಾರಣಿಗಳು ಮತ್ತು ಸಾರ್ವಜನಿಕರನ್ನು ದಿಕ್ಕು ತಪ್ಪಿಸುತ್ತಿರುವ ಅಧಿಕಾರಿಗಳನ್ನು ಹತ್ತು ದಿನ ಜೈಲಿಗೆ ತಳ್ಳಿದರೆ ಬುದ್ಧಿ ಬರುತ್ತದೆ’ ಎಂದು ಹೈಕೋರ್ಟ್ ಕಿಡಿ ಕಾರಿದೆ.
‘ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ದಪ್ಪ ಚರ್ಮದವರಾಗಿದ್ದು, ಆಡಳಿತ ಯಂತ್ರ ಸ್ಥಗಿತಗೊಂಡಿದೆ’ ಎಂದು ನ್ಯಾಯಮೂರ್ತಿ ಎಸ್ಎನ್.ಸತ್ಯನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೇರಿದ ಮೂಡಿಗೆರೆ ತಾಲ್ಲೂಕಿನಲ್ಲಿರುವ 100 ಎಕರೆ ಜಮೀನಿನಲ್ಲಿ ಐದು ಎಕರೆಯನ್ನು ಅಂಬೇಡ್ಕರ್ ಭವನಕ್ಕೆ ಮೀಸಲಿಡುವಂತೆ ಅಂದಿನ ಉಪ ವಿಭಾಗಾಧಿಕಾರಿ ನೇಹಲ್ ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿದ್ದರು. ಇದನ್ನು ವಿವಿ ಪ್ರಶ್ನಿಸಿದ್ದು ಈ ಪ್ರಕರಣದ ವಿಚಾರಣೆ ಗುರುವಾರ ನಡೆಯಿತು.
ಈ ವೇಳೆ ಸರ್ಕಾರಿ ಅಧಿಕಾರಿಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ‘ಅಧಿಕಾರಿಗಳು ಕೋರ್ಟ್ ಆದೇಶಗಳಿಗೆ ಡೋಂಟ್ ಕೇರ್ ಎನ್ನುತ್ತಾರೆ. ತಮಗಿಷ್ಟ ಬಂದ ಹಾಗೆ ಆದೇಶ ಹೊರಡಿಸುತ್ತಾರೆ. ಸಾರ್ವಜನಿಕರು ಮತ್ತು ಸಂಸ್ಥೆಗಳ ಹಣವನ್ನು ತಮ್ಮ ಅಪ್ಪನ ಮನೆ ಆಸ್ತಿ ಎಂದು ಭಾವಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಶಿಫಾರಸು ಮಾಡಿರುವ ಬಗ್ಗೆ ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗಿ ಪ್ರಮಾಣಪತ್ರ ಸಲ್ಲಿಸಬೇಕು. ಒಂದೊಮ್ಮೆ ಪ್ರಮಾಣಪತ್ರ ತೃಪ್ತಿ ನೀಡದೇ ಹೋದರೆ ನೇಹಲ್ ವಿರುದ್ಧ ಪ್ರಾಸಿಕ್ಯೂಷನ್ಗೆ ಆದೇಶಿಸಲಾಗುವುದು’ ಎಂದು ನ್ಯಾಯಪೀಠ ಎಚ್ಚರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.