ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಮತ್ತು ಎಲ್ಪಿಜಿ ವಿತರಣಾ ಕೇಂದ್ರವನ್ನು ಆರಂಭಿಸಲು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕೆಂಬ ನಿಯಮಾವಳಿ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕರ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.
ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿದೆ. ಅದನ್ನು ಅಧ್ಯಯನ ಮಾಡಿ, ಕರಡು ನಿಯಮಾವಳಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
‘ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಮತ್ತು ಎಲ್ಪಿಜಿ ವಿತರಣಾ ಕೇಂದ್ರ ಆರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಮಾತ್ರ ಬೇಕಿತ್ತು. ಇನ್ನು ಮುಂದೆ ರಾಜ್ಯ ಸರ್ಕಾರದ ಅನುಮತಿಯನ್ನೂ ಪಡೆಯಬೇಕಾಗುತ್ತದೆ’ ಎಂದರು.
ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಫಲಾನುಭವಿಗಳು ಭರಿಸಬೇಕಾದ ಹಣವನ್ನು ಆಯಾ ಏಜೆನ್ಸಿಗಳಿಗೆ ರಾಜ್ಯ ಸರ್ಕಾರವೇ ಡಿಡಿ ಮೂಲಕ ಪಾವತಿಸುತ್ತಿದೆ. ಕೇಂದ್ರ ಸರ್ಕಾರ ಎಲ್ಲ ಮೊತ್ತವನ್ನು ನೇರವಾಗಿ ಪೆಟ್ರೋಲಿಯಂ ಕಂಪನಿಗಳಿಗೆ ಪಾವತಿಸುವಂತೆ ಷರತ್ತು ವಿಧಿಸಿದೆ. ಆದರೆ, ಕಂಪನಿಗಳು ಹಣ ಪಡೆದು ವಿಳಂಬ ಮಾಡಿದರೆ, ನಾವು ಯಾರನ್ನು ಪ್ರಶ್ನಿಸಬೇಕು’ ಎಂದು ಕೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.