ಕಲಬುರ್ಗಿ: ‘ಸಂವಿಧಾನದ 371(ಜೆ) ಕಲಂ ತಿದ್ದುಪಡಿಯಿಂದ ಲಭ್ಯವಾಗಿರುವ ಮೀಸಲಾತಿಯ ಸಮರ್ಪಕ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ’ ಎಂದು ಆರೋಪಿಸಿ ಫೆ. 26ರಂದು ಹೈದರಾಬಾದ್ ಕರ್ನಾಟಕ ಬಂದ್ ನಡೆಸಲು ಭಾನುವಾರ ಇಲ್ಲಿ ನಡೆದ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
‘ನೇಮಕಾತಿಯಲ್ಲಿ ಮೀಸಲಾತಿ ನಿಯಮ ಪಾಲನೆ ಆಗುತ್ತಿಲ್ಲ. ಮುಖ್ಯಮಂತ್ರಿ, ರಾಜ್ಯಪಾಲರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ. ಹೀಗಾಗಿ ಬಂದ್ಗೆ ಕರೆ ನೀಡಲಾಗಿದೆ’ ಎಂದು ಸಮಿತಿಯ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದರು.
‘ಸಭೆಯಲ್ಲಿ ಭಾಗವಹಿಸಿದ್ದ ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಪ್ರತಿನಿಧಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂದ್ ನಂತರವೂ ಸರ್ಕಾರ ಸ್ಪಂದಿಸದಿದ್ದರೆ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮರು ಚಾಲನೆ ನೀಡಲು ನಿರ್ಧರಿಸಲಾಗಿದೆ’ ಎಂದರು.
ನೇಮಕಾತಿಗೆ ವಿರೋಧ: ‘6,022 ಡಾಟ್ರಾ ಎಂಟ್ರಿ ಆಪರೇಟರ್, 101 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ, 371(ಜೆ ) ಅಡಿ ಮೀಸಲಾತಿ ನಿಗದಿ ಮಾಡಿಲ್ಲ. ರಾಜ್ಯ ಸರ್ಕಾರದ ಎಲ್ಲ ನೇಮಕಾತಿಗಳಲ್ಲೂ 371(ಜೆ) ಕಲಂ ಅನ್ವಯ ಆಗಬೇಕು. ಸರ್ಕಾರವೇ ಈ ವಿಷಯದಲ್ಲಿ ಅನ್ಯಾಯ ಮಾಡುತ್ತಿದೆ’ ಎಂದು ಆಪಾದಿಸಿದರು.
‘371(ಜೆ) ತಿದ್ದುಪಡಿಯ ಉದ್ದೇಶವನ್ನು ಸರ್ಕಾರ ವಿಫಲಗೊಳಿಸುತ್ತಿದೆ. ಅನ್ಯಾಯ ಸರಿಪಡಿಸುವಂತೆ ಪದೇ ಪದೇ ಕೇಳುವಂತೆ ಮಾಡುತ್ತಿದೆ’ ಎಂದು ಸಮಿತಿಯ ಕಾರ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರ ದೂರಿದರು.
‘ಸರ್ಕಾರ ಅನ್ಯಾಯ ಮುಂದುವರೆಸಿದರೆ ಜನ ದಂಗೆ ಏಳಲಿದ್ದಾರೆ. ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮತ್ತೆ ಚಾಲನೆ ನೀಡಲಿದ್ದಾರೆ. ವೈಜನಾಥ ಪಾಟೀಲ ಅವರ ನೇತೃತ್ವದಲ್ಲಿ ಪ್ರತ್ಯೇಕ ಪಕ್ಷ ರಚನೆ ಬಗ್ಗೆಯೂ ಚಿಂತನೆ ನಡೆದಿದೆ’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.