ಮಂಗಳೂರು: ಉಡುಪಿಯ ಮಲ್ಪೆ ತೀರದಲ್ಲಿ ನಡೆದ ಮೀನುಗಾರರ ಸಮಾವೇಶ ಮುಗಿಸಿ ಹಿಂದಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯ ಮುಸ್ಲಿಮರ ಗುಂಪಿನ ನಡುವೆ ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗರೆಯಲ್ಲಿ ಮಂಗಳವಾರ ರಾತ್ರಿ ಘರ್ಷಣೆ ನಡೆದಿದೆ. ಕಲ್ಲು ತೂರಾಟದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಬಸ್ಸಿನಲ್ಲಿ ವಾಪಸಾಗುತ್ತಿದ್ದರು. ಅವರು ಘೋಷಣೆ ಕೂಗುತ್ತಾ ಬರುತ್ತಿರುವುದಕ್ಕೆ ಬೆಂಗರೆಯ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರಿದ್ದ ಬಸ್ಸನ್ನು ಸ್ಥಳೀಯ ಮುಸ್ಲಿಮರು ತಡೆದಿದ್ದಾರೆ. ಆ ಬಳಿಕ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ. ಗಾಯಗೊಂಡಿರುವ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಮುಸ್ಲಿಂ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಣಂಬೂರು ಠಾಣೆಯಲ್ಲಿ ಪರಸ್ಪರರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.
ಗಾಯಾಳುಗಳನ್ನು ರಾಹುಲ್, ಲೋಕೇಶ್, ವಿಪಿನ್ ಮತ್ತು ಅಮೀರ್ ಎಂದು ಗುರುತಿಸಲಾಗಿದೆ.
ಗಾಯಾಳುಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.