ಬೆಂಗಳೂರು: ರೈತರ ಸಾಲ ಮನ್ನಾ ಮಾಡಬೇಕು. ಬೆಳೆಗಳಿಗೆ ಸೂಕ್ತ ಬೆಲೆ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ರೈತ ಸಂಘಟನೆಗಳು ನಗರದಲ್ಲಿ ಜೂನ್ 6ರಿಂದ ಪ್ರತಿಭಟನೆ ಆರಂಭಿಸಲಿವೆ.
‘ಪ್ರಜಾವಾಣಿ’ ಜತೆ ಮಾತನಾಡಿದ ರೈತ ಸಂಘಟನೆ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಆನಂದರಾವ್ ವೃತ್ತ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡಲಿದ್ದೇವೆ. ಹಲವು ಸಂಘಟನೆಗಳ ಮುಖಂಡರು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.
‘ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಮಧ್ಯಪ್ರದೇಶ ಸರ್ಕಾರದ ವಿರುದ್ಧ ರಾಷ್ಟ್ರೀಯ ಕಿಸಾನ್ ಮಹಾಸಂಘವು ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ನಮ್ಮ ಬೆಂಬಲವಿದೆ. ಜತೆಗೆ, ನಮ್ಮ ರಾಜ್ಯದ ರೈತರ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಬಗ್ಗೆಯೂಪ್ರತಿಭಟನೆಯಲ್ಲಿ ಚರ್ಚಿಸಲಿದ್ದೇವೆ’ ಎಂದರು.
‘ರೈತರು ಬೆಳೆದ ತರಕಾರಿ ಹಾಗೂ ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಸದ್ಯಕ್ಕೆ ತೀರ್ಮಾನ ಕೈಗೊಂಡಿಲ್ಲ. ಜೂನ್ 6ರಂದು ನಡೆಸಲಿರುವ ಪ್ರತಿಭಟನೆಯಲ್ಲೇ ಆ ಬಗ್ಗೆ ನಿರ್ಧರಿಸಲಿದ್ದೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.