ADVERTISEMENT

70 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಒಂದು ವಿಭಾಗಕ್ಕೆ 70 ವಿದ್ಯಾರ್ಥಿಗಳನ್ನು ನಿಗದಿಪಡಿಸಿ, ಅದರ ಆಧಾರದ ಮೇಲೆ ಹೆಚ್ಚುವರಿ ಶಿಕ್ಷಕರನ್ನು ಸ್ಥಳಾಂತರಿಸುವ ಸರ್ಕಾರದ ಕ್ರಮಕ್ಕೆ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಅನುಪಾತ 30:1ರ ಪ್ರಮಾಣದಲ್ಲಿದೆ. ಆದರ್ಶ ವಿದ್ಯಾಲಯಗಳಲ್ಲಿ 40:1ರ ಅನುಪಾತವಿದೆ. ಆದರೆ ಪ್ರೌಢಶಾಲೆಗಳಲ್ಲಿ 70:1ರ ಪ್ರಮಾಣ ನಿಗದಿ ಮಾಡಿರುವುದು ಸರಿಯಲ್ಲ ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಆದೇಶದಿಂದ ಬೋಧನಾ ಅವಧಿ ವಾರಕ್ಕೆ 26ರಿಂದ 36 ಗಂಟೆಗೆ ಹೆಚ್ಚಳವಾಗಲಿದೆ. ಶಿಕ್ಷಕರಿಗೆ ಒತ್ತಡ ಹೆಚ್ಚಾಗಿಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಪ್ರಕಾರ ಪ್ರೌಢಶಾಲೆಗಳಲ್ಲಿ 40 ಮಕ್ಕಳಿಗೆ ಒಬ್ಬ ಶಿಕ್ಷಕ ಇರಬೇಕು. ಇದ್ಯಾವುದನ್ನೂ ಗಮನಿಸದೆ ಅವೈಜ್ಞಾನಿಕವಾಗಿ ಹೆಚ್ಚುವರಿ ಶಿಕ್ಷಕರು, ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದಿದ್ದಾರೆ.
 
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಇದೇ 2ರಂದು ಹೊರಡಿಸಿರುವ ಆದೇಶದ ಪ್ರಕಾರ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿದರೆ ಕಲಾ ಶಿಕ್ಷಕರ ಹುದ್ದೆಗಳು ಕಡಿಮೆಯಾಗಲಿವೆ. ಇದರಿಂದ ಗುಣಮಟ್ಟದ ಬೋಧನೆಗೆ ತೊಂದರೆಯಾಗಲಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.