ಸಚಿವ ಸಂಪುಟ ಸಭೆ
– ಪ್ರಜಾವಾಣಿ ಚಿತ್ರ
ಸುವರ್ಣ ವಿಧಾನಸೌಧ (ಬೆಳಗಾವಿ): ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ, ಅನಧಿಕೃತ ಬಡಾವಣೆಗಳ ಸ್ವತ್ತುಗಳಿಗೆ ಎ–ಖಾತಾ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.
ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ ವಿನ್ಯಾಸಗಳು, ವಿವಿಧ ಯೋಜನೆಗಳಲ್ಲಿ ಮಂಜೂರಾದ ನಿವೇಶನಗಳಿಗೆ ಈಗಾಗಲೇ ಬಿ–ಖಾತಾ ನೀಡಲಾಗುತ್ತಿದೆ. ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗುತ್ತಿದೆ. ಎ–ಖಾತಾ ನೀಡಲು ಬೇಡಿಕೆ ಇದೆ’ ಎಂದರು.
ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ‘ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಲಾಗುತ್ತಿದ್ದು, ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಅಧಿಕೃತ ನಿವೇಶನ ಕಟ್ಟಡಗಳಿಗೆ ನಮೂನೆ -3 ಮತ್ತು ಅನುಮೋದನೆ ಪಡೆಯದ ಸ್ವತ್ತುಗಳಿಗೆ ನಮೂನೆ 3-ಎ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಕಟ್ಟಡ ಪರವಾನಿಗೆ ಕೋರಿ ವಾಸ್ತುಶಿಲ್ಪ ಶಾಸ್ತ್ರಜ್ಞರ ಮೂಲಕ ಅಗತ್ಯ ದಾಖಲೆಗಳ ಜತೆ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ಕಟ್ಟಡ ಪರವಾನಗಿ ನೀಡಲಾಗುತ್ತಿದೆ. ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕಾರ್ಯವಿಧಾನ ಹೊರಡಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.