ADVERTISEMENT

ಲಸಿಕೆ ದುರ್ಬಳಕೆ: ಅಶ್ವತ್ಥನಾರಾಯಣ ವಜಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 12:10 IST
Last Updated 11 ಜೂನ್ 2021, 12:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ‘ಲಸಿಕೆ ವಿತರಣೆಯಲ್ಲಿ ಸ್ವಜನ ಪಕ್ಷಪಾತ ನೀತಿ ಅನುಸರಿಸುತ್ತಿರುವ, ಲಸಿಕೆಯನ್ನು ದುರ್ಬಳಕೆ ಮಾಡುತ್ತಿರುವ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರನ್ನು ಈ ಹುದ್ದೆಯಿಂದ ಕೂಡಲೇ ವಜಾಗೊಳಿಸಿ’ ಎಂದು ಆಮ್‌ ಆದ್ಮಿ ಪಕ್ಷದಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು ‘ಉಪ ಮುಖ್ಯಮಂತ್ರಿಯೂ ಆಗಿರುವ ಅಶ್ವತ್ಥನಾರಾಯಣ ಅವರಿಗೆ ರಾಜ್ಯದ ಜನರ ಹಿತ ಬೇಕಿಲ್ಲ. ಅವರು ತಾವು ಪ್ರತಿನಿಧಿಸುವ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ತಮ್ಮ ಬೆಂಬಲಿಗರು ಹೆಚ್ಚಿರುವ ಪ್ರದೇಶಗಳಲ್ಲಿ ಮೊದಲೇ ಟೋಕನ್‌ಗಳನ್ನು ವಿತರಿಸಿ ಲಸಿಕೆ ಹಾಕಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜನರು ಲಸಿಕೆ ಪಡೆಯಲು ಮುಂಜಾನೆಯಿಂದಲೇ ಆರೋಗ್ಯ ಕೇಂದ್ರಗಳ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಹೀಗಿದ್ದರೂ ಯಾರಿಗೂ ಲಸಿಕೆ ಸಿಗುತ್ತಿಲ್ಲ. ಲಸಿಕೆ ನೀಡುವಿಕೆಯಲ್ಲೂ ಬಿಜೆಪಿ ಓಟ್‌ ಬ್ಯಾಂಕ್‌ ನೀತಿ ಅನುಸರಿಸುತ್ತಿದೆ. ಇದು ಈಗಾಗಲೇ ಸಾಬೀತಾಗಿದೆ. ಇದಕ್ಕೆ ಮುಖ್ಯಮಂತ್ರಿ ಹಾಗೂ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರು ಬೆನ್ನೆಲುಬಾಗಿ ನಿಂತಿದ್ದಾರೆ. ಹೀಗಾಗಿ ಅಶ್ವತ್ಥನಾರಾಯಣ ಅವರನ್ನು ವಜಾಗೊಳಿಸಬೇಕು. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಿದ್ದೇವೆ’ ಎಂದು ಅವರು ತಿಳಿಸಿದರು.

ADVERTISEMENT

ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಹಾಗೂ ಬೆಂಗಳೂರು ನಗರ ಎಸ್‌ಸಿ, ಎಸ್‌ಟಿ ವಿಭಾಗದ ಅಧ್ಯಕ್ಷ ಜಯಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.