ADVERTISEMENT

ಭೂಮಾಫಿಯಾಗೆ ಸಚಿವ ಅಶೋಕ ರಕ್ಷಣೆ: ಎಎಪಿ

ಎ.ಸಿ. ಶಿವಣ್ಣ ವಿರುದ್ಧ ಕ್ರಮ ಏಕಿಲ್ಲ: ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2022, 16:27 IST
Last Updated 29 ಮಾರ್ಚ್ 2022, 16:27 IST

ಬೆಂಗಳೂರು: ‘ನಗರದ ಭೂಮಾಫಿಯಾಗೆ ಕಂದಾಯ ಸಚಿವ ಆರ್‌.ಅಶೋಕ ಬೆನ್ನೆಲುಬಾಗಿ ನಿಂತಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅವರು ರಕ್ಷಿಸುತ್ತಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ)ವಕೀಲರ ಘಟಕದ ಅಧ್ಯಕ್ಷ ಮಂಜುನಾಥ್‌ ಸ್ವಾಮಿ ಆರೋಪಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಯಾಗಿದ್ದ ಎಂ.ಜಿ.ಶಿವಣ್ಣ ಹಾಗೂ ತಹಶೀಲ್ದಾರ್‌ ಶಿವಪ್ಪ ಲಮಾಣಿ ಅವರು ಮುನಿರಾಜು ಹಾಗೂ ಇತರೆ ಭೂಗಳ್ಳರ ಜತೆಗೂಡಿಬೆಂಗಳೂರು ದಕ್ಷಿಣ ತಾಲ್ಲೂಕಿನದೊಡ್ಡತೋಗೂರು ಗ್ರಾಮದಲ್ಲಿ ಭೂಕಬಳಿಕೆ ಮಾಡಿದ್ದಾರೆ’ ಎಂದರು.

‘ಸಂತ್ರಸ್ತರು ಹೈಕೋರ್ಟ್‌ ಮೆಟ್ಟಿಲೇರಿದಾಗ, ಇಬ್ಬರು ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಆದರೆ, ಸಚಿವ ಅಶೋಕ ಅವರ ಪ್ರಭಾವದಿಂದಾಗಿ ತಪ್ಪಿತಸ್ಥರಿಗೆ ಯಾವುದೇ ಶಿಕ್ಷೆಯಾಗಿಲ್ಲ’ ಎಂದು ಹೇಳಿದರು.

ADVERTISEMENT

ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ‘ಅಶೋಕ ಅವರು ಸಚಿವರಾದಾಗಿನಿಂದ ಬೆಂಗಳೂರಿನಲ್ಲಿ ಭೂಮಾಫಿಯಾ ಹಾವಳಿ ಹೆಚ್ಚಾಗಿದೆ. ಅಕ್ರಮವಾಗಿ ಜಮೀನನ್ನು ವಶಪಡಿಸಿಕೊಳ್ಳುವುದು, ಬೆದರಿಕೆಯೊಡ್ಡಿ ಒಕ್ಕಲೆಬ್ಬಿಸುವಂತಹ ಧೋರಣೆಗಳು ಅವ್ಯಾಹತವಾಗಿ ನಡೆಯುತ್ತಿವೆ. ಕಂದಾಯ ಇಲಾಖೆಯ ಅಧಿಕಾರಿಗಳೇ ಭೂಮಾಫಿಯಾಗೆ ಸಹಕಾರ ನೀಡುತ್ತಿದ್ದಾರೆ. ಬಡ ಹಾಗೂ ಮಧ್ಯಮ ವರ್ಗದ ಜನರು ಆತಂಕದಲ್ಲೇ ಜೀವನ ನಡೆಸಬೇಕಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.