ADVERTISEMENT

ರಮೇಶ್ ಕುಮಾರ್‌ ವಿರುದ್ಧ ಅಸಭ್ಯ ಪದ ಬಳಕೆ; ಕುಮಾರಸ್ವಾಮಿ ವಿಷಾದ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 8:13 IST
Last Updated 23 ನವೆಂಬರ್ 2022, 8:13 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಜೆಡಿಎಸ್ ರಥಯಾತ್ರೆ ವೇಳೆ ಮಂಗಳವಾರ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿರುದ್ಧ ಬಳಸಿದ ಅಸಭ್ಯ ಪದದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ಅಸಭ್ಯ ಪದ ಬಳಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲೇ ಟ್ವೀಟ್ ಮಾಡಿರುವ ಅವರು, 'ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ' ಎಂದಿದ್ದಾರೆ.

'ಮಂಗಳವಾರ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲಾ‌ ಕಟ್ಟಡ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂಬುದನ್ನು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು' ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.