ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಮುಂದುವರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್, ‘ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಸೈದ್ಧಾಂತಿಕ, ರಾಜಕೀಯ ಕಾರಣಕ್ಕಾಗಿ ಎನ್ಇಪಿ ರದ್ದುಗೊಳಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ರಚಿಸಿರುವ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ಘೋಷಿಸಿದೆ. ಇದರಿಂದ, ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ‘ ಎಂದರು.
‘ದೇಶದ 2.5 ಲಕ್ಷ ಗ್ರಾಮಗಳಲ್ಲಿ 676 ಜಿಲ್ಲೆಗಳು, 36 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಭೆ ನಡೆಸಿ 2 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಪಡೆದು ಎನ್ಇಪಿಯನ್ನು ರಚಿಸಲಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಉತ್ಕೃಷ್ಟಗೊಳಿಸುವ ಹಾಗೂ ಜಾಗತಿಕ ಮಟ್ಟಕ್ಕೆ ಉನ್ನತೀಕರಿಸುವ ದೂರದೃಷ್ಟಿ ಹೊಂದಿರುವ ಎನ್ಇಪಿಯನ್ನು ಜಾರಿಗೊಳಿಸಬೇಕು. ದೇಶದ ಇತಿಹಾಸದಲ್ಲಿಯೇ ಅತ್ಯಂತ ಸಮಗ್ರ ರೂಪದಲ್ಲಿ ಹೊರಹೊಮ್ಮಿದ ಈ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಬೇಕು. ಇದರಲ್ಲಿರುವ ಚಿಕ್ಕಪುಟ್ಟ ದೋಷಗಳನ್ನು ಸರಿಪಡಿಸಿ ಮುನ್ನಡೆಯಬೇಕು’ ಎಂದು ಸಲಹೆ ನೀಡಿದರು. ಎಬಿವಿಪಿ ಜಂಟಿ ಕಾರ್ಯದರ್ಶಿ ನಿತಿನ್, ಹೇಮಂತ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.