ಬೆಂಗಳೂರು: ಭ್ರಷ್ಟಾಚಾರದ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಮತ್ತು ಸಿಬ್ಬಂದಿ ಕೋರಮಂಗಲ ಬಿಡಿಎ ಕಾಂಪ್ಲೆಕ್ಸ್ ಹಾಗೂ ಜ್ಞಾನಭಾರತಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣದ ಕುರಿತು ಗುರುವಾರ ಜಾನಜಾಗೃತಿ ಅಭಿಯಾನ ನಡೆಸಿದರು.
ಎರಡೂ ಸ್ಥಳಗಳಲ್ಲಿ ಸರ್ಕಾರಿ ಕಚೇರಿಗಳಿಗೆ ವಿವಿಧ ಸೇವೆ ಪಡೆಯಲು ಬಂದಿದ್ದ ಜನರನ್ನು ಭೇಟಿಮಾಡಿದ ಎಸಿಬಿ ಅಧಿಕಾರಿಗಳು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಎಸಿಬಿ ಕಾರ್ಯನಿರ್ವಹಣೆ, ದೂರು ನೀಡಲು ಇರುವ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕರಪತ್ರಗಳನ್ನು ವಿತರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಯತ್ನಿಸಿದರು.
ಎರಡೂ ಕಚೇರಿಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ದೂರವಾಣಿ ಸಂಪರ್ಕದ ಮಾಹಿತಿ ಪತ್ರಗಳನ್ನು ಅಂಟಿಸಲಾಯಿತು. ಸಾರ್ವಜನಿಕರಿಗೆ ಸುಲಲಿತವಾಗಿ ಸರ್ಕಾರಿ ಸೇವೆಗಳನ್ನು ಒದಗಿಸುವಂತೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. ಎಸಿಬಿ ಬೆಂಗಳೂರು ನಗರ ಘಟಕದ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.