ADVERTISEMENT

ವಿದ್ಯುತ್‌ ಸಮಸ್ಯೆಯಾಗದಂತೆ ಕ್ರಮ: ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 19:31 IST
Last Updated 8 ಮಾರ್ಚ್ 2023, 19:31 IST
ಬೆಂಗಳೂರಿನಲ್ಲಿ ಬುಧವಾರ ರೈತ ಸಂಘದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸಚಿವ ಕೆ. ಗೋಪಾಲಯ್ಯ, ಮುಖಂಡರಾದ ಬಡಗಲಪುರ ನಾಗೇಂದ್ರ, ಗೌರವ ಅಧ್ಯಕ್ಷ ಚಾಮರಸಮಾಲಿ ಪಾಟೀಲ್, ಮುಖಂಡರಾದ ಟಿ. ನೂಲೇನೂರು ಶಂಕರಪ್ಪ, ಬಿ.ನಾಗೇಂದ್ರ ಇದ್ದರು.
ಬೆಂಗಳೂರಿನಲ್ಲಿ ಬುಧವಾರ ರೈತ ಸಂಘದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸಚಿವ ಕೆ. ಗೋಪಾಲಯ್ಯ, ಮುಖಂಡರಾದ ಬಡಗಲಪುರ ನಾಗೇಂದ್ರ, ಗೌರವ ಅಧ್ಯಕ್ಷ ಚಾಮರಸಮಾಲಿ ಪಾಟೀಲ್, ಮುಖಂಡರಾದ ಟಿ. ನೂಲೇನೂರು ಶಂಕರಪ್ಪ, ಬಿ.ನಾಗೇಂದ್ರ ಇದ್ದರು.   

ಬೆಂಗಳೂರು: ‘ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್‌ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ರೈತರ ನಿಯೋಗದ ಜತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.

’ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ಏಳು ತಾಸು ಮೂರು ಫೇಸ್‌ ವಿದ್ಯುತ್‌ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ವಿದ್ಯುತ್‌ ಕೊರತೆಯಾದಲ್ಲಿ ಹೊರರಾಜ್ಯಗಳಿಂದ ಪಡೆಯುವ ಕುರಿತು ಸಹ ಚಿಂತನೆ ಮಾಡಲಾಗುವುದು’ ಎಂದು ತಿಳಿಸಿದರು.

ADVERTISEMENT

‘ರಾಜ್ಯದ ವಿವಿಧೆಡೆ ಕೆಐಎಡಿಬಿ ಭೂಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಅಲ್ಲಿ ಸ್ಥಾಪಿಸಲಾಗುವ ಉದ್ಯಮಗಳಲ್ಲಿ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ರಚಿಸಲಾಗುವುದು’ ಎಂದು ತಿಳಿಸಿದರು.

‘ಮಂಡ್ಯದ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ನಿರ್ಧರಿಸಿ, ಚಾಲನೆಯೂ ನೀಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಇನಷ್ಟು ಸಶಕ್ತಗೊಳಿಸಲಾಗುವುದು. ಕಬ್ಬಿಗೆ ಎಸ್ಎಪಿ ನೀಡುವ ಕುರಿತಂತೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ವೀರ ಪುಲಿಕೇಶಿ ಸಹಕಾರಿ ಬ್ಯಾಂಕ್‌ ರೈತರಿಗೆ ಕಿರುಕುಳ ನೀಡುತ್ತಿರುವುದಾಗಿ ರೈತ ಮುಖಂಡರು ಮುಖ್ಯಮಂತ್ರಿ ಅವರ ಗಮನ ಸೆಳೆದರು. ‘ಈ ಬ್ಯಾಂಕಿಗೆ ಕೂಡಲೇ ನೋಟೀಸ್‌ ನೀಡಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.