ಸಿಎಂ ಸಿದ್ದರಾಮಯ್ಯ
ಬೆಂಗಳೂರು: ‘ಇನ್ನು ಮುಂದೆ ಪ್ರತಿ ತಿಂಗಳ ಕೊನೆಗೆ ನಾನೇ ಒಬ್ಬೊಬ್ಬರಿಂದಲೇ ಮಾಹಿತಿ ಪಡೆದು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸುತ್ತೇನೆ’ ಎಂದು ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಾಣಿಜ್ಯ ತೆರಿಗೆ ಸಂಗ್ರಹ ಕುರಿತು ಮಂಗಳವಾರ ಅವರು ಪ್ರಗತಿ ಪರಿಶೀಲನೆ ನಡೆಸಿದರು.
ವಾಣಿಜ್ಯ ಇಲಾಖೆ ಮೂಲಕ 2024-25ನೇ ಸಾಲಿನಲ್ಲಿ ಒಟ್ಟು ಗುರಿ ₹ 1.10 ಲಕ್ಷ ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದವರೆಗೆ ₹ 58,773 ಕೋಟಿ (ಶೇ 53.5) ಸಂಗ್ರಹಿಸಲಾಗಿದೆ. ಅದರಲ್ಲಿ ಜಿಎಸ್ಟಿ ₹ 44,783 ಕೋಟಿ, ಕೆಎಸ್ಟಿ ₹ 13,193 ಕೋಟಿ, ವೃತ್ತಿ ತೆರಿಗೆ ₹ 797 ಕೋಟಿ ಸೇರಿದೆ. 2023-24ನೇ ಸಾಲಿನ ಈ ಅವಧಿಗೆ ಹೋಲಿಸಿದರೆ ₹ 5,957 ಕೋಟಿ ಹೆಚ್ಚುವರಿ ಸಂಗ್ರಹವಾಗಿದೆ.
‘ಮುಂದಿನ ಐದು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳು ₹ 10,200 ಕೋಟಿ ತೆರಿಗೆ ಸಂಗ್ರಹ ಗುರಿ ಇರಿಸಿ ಮಾರ್ಚ್ ಒಳಗೆ ಒಟ್ಟು ಗುರಿ ಸಾಧಿಸಬೇಕು. ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಗುರಿ ಸಾಧನೆ ಸಾಧ್ಯ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸಲೇ ಬೇಕಿದೆ’ ಎಂದರು.
‘ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ನಿಗದಿತ ಗುರಿ ಸಾಧಿಸದ ಅಧಿಕಾರಿಗಳನ್ನು ಹೊಣೆಗಾರರಾಗಿ ಮಾಡಲಾಗುವುದು. ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆ ಆಗಲೇ ಬಾರದು. ಕರ ಸಮಾಧಾನ ಯೋಜನೆ ಅಡಿ ₹ 2 ಸಾವಿರ ಕೋಟಿ ಹೆಚ್ಚುವರಿ ಸಂಗ್ರಹದ ನಿರೀಕ್ಷೆಯಿದೆ’ ಎಂದರು.
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಎ.ಶಿಖಾ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
‘ಅಬಕಾರಿ ಇಲಾಖೆಗೆ 2024-25ನೇ ಸಾಲಿಗೆ ಒಟ್ಟು ಗುರಿ ₹ 38,525 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ. ಅಕ್ಟೋಬರ್ 28ರವರೆಗೆ ₹ 20,237 ಕೋಟಿ (ಶೇ 52.53) ಗುರಿ ಸಾಧನೆ ಮಾಡಲಾಗಿದೆ. ಮಾರ್ಚ್ ಒಳಗೆ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಅಬಕಾರಿ ಇಲಾಖೆಯ ಪ್ರಗತಿಯ ಪರಿಶೀಲನೆಯನ್ನೂ ಮುಖ್ಯಮಂತ್ರಿ ನಡೆಸಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ₹ 1301.15 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಿಸಲಾಗಿದೆ.
‘ಗೋವಾದಿಂದ ಅಕ್ರಮ ಮದ್ಯ ಸಾಗಣೆ ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದೂ ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.