ಹನೂರು: ನಟ ದರ್ಶನ್ ಅವರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ಕಳ್ಳಬೇಟೆ ತಡೆ ಶಿಬಿರದ ವಾಚರ್ಗಳಿಗೆ ₹12 ಲಕ್ಷ ಧನಸಹಾಯ ಮಾಡಿದ್ದಾರೆ.
ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ದರ್ಶನ್, ಈಚೆಗೆ ಕಳ್ಳಬೇಟೆ ತಡೆ ಶಿಬಿರಕ್ಕೆ ಭೇಟಿ ನೀಡಿ, ವಾಚರ್ಗಳೊಂದಿಗೆ ಸಂವಾದ ನಡೆಸಿದ್ದರು.
‘ಕುಟುಂಬ ವರ್ಗದವರಿಂದ ದೂರವಿದ್ದು, ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಾ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ತೊಡಗಿದ್ದಾರೆ. ಅಭದ್ರತೆ ಹೋಗಲಾಡಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ. ತುರ್ತು ಸಂದರ್ಭಗಳಲ್ಲಿ ಅವರ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಈ ಸಹಾಯ ಮಾಡುತ್ತಿದ್ದೇನೆ. ಪ್ರತಿ ವರ್ಷವೂ ಮುಂದುವರಿಸುವುದಾಗಿ ದರ್ಶನ್ ಹೇಳಿದ್ದಾರೆ’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
‘ವಿಭಾಗ ಮಟ್ಟದಲ್ಲಿ ‘ಐ ಆ್ಯಮ್ ಫಾರ್ ವೈಲ್ಡ್ಲೈಫ್’ ಎಂಬ ನಿಧಿ ತೆರೆದು, ದಾನಿಗಳು ನೀಡುವ ಹಣವನ್ನು ಸಂಗ್ರಹಿಸಿ ಅರಣ್ಯ ವೀಕ್ಷಕರ ಅಭ್ಯುದಯಕ್ಕಾಗಿ ವಿನಿಯೋಗಿಸಲಾಗುವುದು. ಅವರ ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ವಿಪತ್ತು ಸಂದರ್ಭದಲ್ಲಿ ಬಳಸಿಕೊಳ್ಳಲು ಅವಕಾಶವಿದೆ’ ಎಂದು ಮಲೆಮಹದೇಶ್ವರ ವನ್ಯಧಾಮದ ಉಪಅರಣ್ಯ ಸಂರಕ್ಷಣಧಿಕಾರಿವಿ.ಏಡುಕುಂಡಲು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.