ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ವಶಕ್ಕೆ, ಬಂಧನ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 10:11 IST
Last Updated 4 ಜುಲೈ 2022, 10:11 IST
ಎಡಿಜಿಪಿ ಅಮ್ರಿತ್
ಎಡಿಜಿಪಿ ಅಮ್ರಿತ್   

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಅಮೃತ್ ಪೌಲ್ ಅವರಿಗೆ ನಾಲ್ಕನೇ ಬಾರಿ ನೋಟಿಸ್ ನೀಡಲಾಗಿತ್ತು. ಸೋಮವಾರ ಬೆಳಿಗ್ಗೆ ವಿಚಾರಣೆಗೆ ಬಂದಿದ್ದ ಪೌಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಸುದೀರ್ಘ ವಿಚಾರಣೆ ಬಳಿಕ ಅವರನ್ನು ಬಂಧಿಸುವ ಸಾಧ್ಯತೆಯೂ ಇದೆ.

'ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿರುವ ಅಮೃತ್ ಪೌಲ್, ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. 545 ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು' ಎಂದು ಸಿಐಡಿ‌ ಮೂಲಗಳು ಹೇಳಿವೆ.

ADVERTISEMENT

'ಆರೋಪಿಗಳ ವಿಚಾರಣೆ ವೇಳೆ ದೊರೆತ ಪುರಾವೆಗಳ ಆಧಾರದಲ್ಲಿ ಅಮೃತ್ ಪೌಲ್ ಅವರನ್ನು ವಿಚಾರಣೆಗೆ ಕರೆಸಲಾಗಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ' ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.