ADVERTISEMENT

17ಕ್ಕೆ ಆದಿಜಾಂಬವ ಅಭಿವೃದ್ಧಿ ನಿಗಮ ಉದ್ಘಾಟನೆ

ನಿಗಮಕ್ಕೆ ₹306 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 17:41 IST
Last Updated 14 ಜನವರಿ 2019, 17:41 IST

ಬೆಂಗಳೂರು: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಇದೇ 17ರಂದು ಬೆಳಿಗ್ಗೆ 11.30ಕ್ಕೆ ಅರಮನೆ ಮೈದಾನದಲ್ಲಿ ಉದ್ಘಾಟಿಸಲಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ, ಸಚಿವರು, ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳುವರು. ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಕಾಲೊನಿ ಯೋಜನೆ ಸಹ ಇದೇ ವೇಳೆ ಉದ್ಘಾಟನೆಗೊಳ್ಳಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರು ಹೆಚ್ಚು ವಾಸಿಸುವ ಕಾಲೊನಿಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಒಳಚರಂಡಿ, ಸಂಪರ್ಕರಸ್ತೆ, ಅಂಗನವಾಡಿ ಕಟ್ಟಡದ ಮೂಲಸೌಕರ್ಯಗಳನ್ನು ಒದಗಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಇದೇ ಸಂದರ್ಭದಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಕೈಪಿಡಿ ಹಾಗೂ ಲಾಂಛನ ಬಿಡುಗಡೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

‘ಐತಿಹಾಸಿಕ ಹಿನ್ನೆಲೆ, ಸಾಂಸ್ಕೃತಿಕ ಒಡನಾಟ, ಸಾಂಪ್ರದಾಯಿಕ ಉದ್ಯೋಗ, ಪ್ರಾದೇಶಿಕ ಭಾಷೆಗಳು, ಹಬ್ಬಗಳ ಆಚರಣೆಗಳನ್ನು ಆಧರಿಸಿ ಆದಿಜಾಂಬವ ಜನಾಂಗವನ್ನು ಗುರುತಿಸಲಾಗಿದ್ದು, ಈ ಜನಾಂಗದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಿಗಮವನ್ನು ಸ್ಥಾಪಿಸಲಾಗುತ್ತಿದೆ. ಈ ವರ್ಷ ನಿಗಮದ ಚಟುವಟಿಕೆಗಾಗಿ ₹ 306.50 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.