
ಮಂಗಳೂರು: ‘ಅಗ್ನಿಪಥ ಯೋಜನೆಯಡಿ ಸೇನೆಗೆ ಸೇರ್ಪಡೆಯಾಗುವವರಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಉಡುಪಿ ಜಿಲ್ಲೆಯಲ್ಲಿ ಇದೇ 27ರಂದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 28ರಂದು ರ್ಯಾಲಿ ನಡೆಯಲಿದೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಉಡುಪಿ ಜಿಲ್ಲೆಯ ಕೋಟಿ ಚೆನ್ನಯ ಸೇನಾ ತರಬೇತಿ ಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರಾಣಿ ಅಬ್ಬಕ್ಕ ಸೇನಾ ತರಬೇತಿ ಶಾಲೆಗಳಲ್ಲಿ ತಲಾ 100 ಮಂದಿಗೆ ತರಬೇತಿ ನೀಡಲಾಗುತ್ತದೆ. ನಾಲ್ಕು ತಿಂಗಳ ಉಚಿತ ತರಬೇತಿಗೆ ಉಡುಪಿ ಜಿಲ್ಲೆಯಿಂದ 309 ಅರ್ಜಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ 130 ಅರ್ಜಿಗಳು ಬಂದಿವೆ. ಅವರಲ್ಲಿ ಅರ್ಹರನ್ನು ಈ ರ್ಯಾಲಿಯಲ್ಲಿ ಆಯ್ಕೆ ಮಾಡಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದರು.
‘ಸೇನೆಗೆ ಸೇರ್ಪಡೆಗೆ ಪೂರಕವಾಗಿ ತರಬೇತಿ ನೀಡುವುದರ ಜೊತೆಗೆ ಪೊಲೀಸ್, ಅರಣ್ಯ ಇಲಾಖೆಗೆ ಸೇರ್ಪಡೆಯಾಗುವವರಿಗೂ ಈ ತರಬೇತಿ ಪ್ರಯೋಜನಕಾರಿ. ಮೊದಲ ತಂಡದ ತರಬೇತಿ ಕಾರ್ಯ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.