ಈಶ್ವರ ಖಂಡ್ರೆ
ಬೆಂಗಳೂರು: ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ ‘ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರ’ದ(ಎಆರ್ಆರ್ಎಸ್) ಚಟುವಟಿಕೆಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿ, 10 ದಿನಗಳ ಒಳಗೆ ವರದಿ ಸಲ್ಲಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಅರಣ್ಯ ಇಲಾಖೆಯ ಅನುಮತಿ ಇಲ್ಲದೇ ಅರಣ್ಯ ಭೂಮಿ ಒತ್ತುವರಿ ಹಾಗೂ ಕಟ್ಟಡ ನಿರ್ಮಾಣ, ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಖರೀದಿ, ಕಾಳಿಂಗ ಸರ್ಪಗಳ ಆವಾಸ ಸ್ಥಾನದಲ್ಲಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು, ಅರಣ್ಯ ಮತ್ತು ವನ್ಯಜೀವಿಗಳ ಕಾಯ್ದೆಗಳ ನೇರ ಉಲ್ಲಂಘನೆ ಆಗುತ್ತಿರುವ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬಹುದಾದ ಕ್ರಮದ ಶಿಫಾರಸಿನೊಂದಿಗೆ ವರದಿ ಸಲ್ಲಿಸಬೇಕು ಎಂದೂ ಖಂಡ್ರೆ ಸೂಚಿಸಿದ್ದಾರೆ.
‘ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರವೇ ಅನುಮತಿ ನೀಡಲಾಗಿರುತ್ತದೆ. ಆದರೆ, ಸಂಶೋಧನೆ ಹೆಸರಿನಲ್ಲಿ ವರ್ಷವಿಡೀ ಛಾಯಾಗ್ರಹಣ ನಡೆಸಿರುವುದನ್ನು ದೂರುದಾರರು ಗಮನ ಸೆಳೆದಿದ್ದಾರೆ. ಕಾಳಿಂಗ ಸರ್ಪಗಳ ಸೆರೆ, ಸಂರಕ್ಷಣೆ ಹೆಸರಿನಲ್ಲಿ ಆಗುತ್ತಿರುವ ವನ್ಯಜೀವಿಗಳ ಶೋಷಣೆ ಬಗ್ಗೆ ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗದ ಜನ ಸಂಗ್ರಾಮ ಪರಿಷತ್ತಿನ ಜಿಲ್ಲಾಧ್ಯಕ್ಷ ಅಖಿಲೇಶ್ ಚಿಪ್ಪಳಿ, ಪತ್ರಕರ್ತ ಉದಯಸಾಗರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅರಣ್ಯ ಸಚಿವರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.