ADVERTISEMENT

ಎಐಸಿಸಿ: ಗಾಂಧಿ ಕುಟುಂದವರೇ ಅಧ್ಯಕ್ಷರಾಗಲಿ: ಸತೀಶ ಜಾರಕಿಹೊಳಿ

ಸತೀಶ ಜಾರಕಿಹೊಳಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 19:30 IST
Last Updated 1 ಆಗಸ್ಟ್ 2019, 19:30 IST

ಬೆಳಗಾವಿ: ‘ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದಲ್ಲಿಯೇ ಯಾರಿಗಾದರೂ ಕೊಟ್ಟರೆ ಒಳಿತು’ ಎಂದು ಕಾಂಗ್ರೆಸ್‌ ಮುಖಂಡ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೊದಲಿನಿಂದಲೂ ಗಾಂಧಿ ಕುಟುಂಬದಲ್ಲೇ ಪಕ್ಷ ಬೆಳೆದು ಬಂದಿದೆ. ಯಾರೇ ಅಧ್ಯಕ್ಷರಾದರೂ ರಾಹುಲ್ ಗಾಂಧಿ ನೇತೃತ್ವದಲ್ಲಿಯೇ ಸಂಘಟನೆ ಮಾಡಲಾಗುತ್ತದೆ. ಆ ಕುಟುಂಬ ಆಶೀರ್ವಾದ ಇದ್ದೇ ಇರುತ್ತದೆ’ ಎಂದು ಪ್ರತಿಕ್ರಿಯಿಸಿದರು.

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಒಂದು ಹಂತದ ಚರ್ಚೆ ಮುಗಿದಿದೆ. ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ ಮಟ್ಟದಲ್ಲಿ ಅಂತಿಮವಾಗಬೇಕು. ಅನರ್ಹ ಶಾಸಕರು ಕಾಂಗ್ರೆಸ್ ಬಗ್ಗೆ ಈಗ ಏನೇ ಹೇಳಿದರೂ ಅದು ಮುಗಿದು ಹೋದ ಅಧ್ಯಾಯ. ಪಕ್ಷ ಬಿಟ್ಟು ಹೋದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಅವರು ಏನೇ ಹೇಳಿದರೂ ಪಕ್ಷ ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ’ ಎಂದು ತಿಳಿಸಿದರು.

ADVERTISEMENT

‘ಬೆಳಗಾವಿಯಲ್ಲಿ ಗೋಕಾಕ, ಕಾಗವಾಡ ಹಾಗೂ ಅಥಣಿ ಈ ಮೂರೂ ಕ್ಷೇತ್ರಗಳಲ್ಲೂ ಉಪಚುನಾವಣೆಯಲ್ಲಿ ಗೆಲ್ಲಲು ತಯಾರಿ ಮಾಡಿಕೊಂಡಿದ್ದೇವೆ. ಗೋಕಾಕ್ ಕ್ಷೇತ್ರಕ್ಕೆ ಲಖನ್ ಜಾರಕಿಹೊಳಿ ಮಾತ್ರ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಅವರನ್ನೇ ಪರಿಗಣಿಸುವ ಸಾಧ್ಯತೆ ಇದೆ. ಅಥಣಿ, ಕಾಗವಾಡದಲ್ಲಿ ತಲಾ ಮೂವರು ಆಕಾಂಕ್ಷಿಗಳಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.