ವಿಧಾನಸೌಧ
ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣಗಳ ಕುರಿತು ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಚೀಟಿಗಳನ್ನು ಅನಧಿಕೃತವಾಗಿ ರದ್ದುಪಡಿಸಲು ಯತ್ನಿಸಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಕ್ರಮ ತೆಗೆದುಕೊಂಡಿದೆ.
ಅಪರಾಧ ತನಿಖಾ ದಳದ (ಸಿಐಡಿ) ಎಡಿಜಿಪಿ ಬಿ.ಕೆ.ಸಿಂಗ್ ಅವರು ಎಸ್ಐಟಿಯ ಮುಖ್ಯಸ್ಥರನ್ನಾಗಿಸಿ, ಸಿಐಡಿಯ ಎಸ್ಪಿಗಳಾದ ಸೈದುಲ್ ಅದಾವತ್ ಮತ್ತು ಶುಭಾನ್ವಿತ ಅವರನ್ನು ಸದಸ್ಯರನ್ನಾಗಿ ಮಾಡಿ ಒಳಾಡಳಿತ ಇಲಾಖೆಯು ಆದೇಶಿಸಿದೆ. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಎಸ್ಐಟಿ ಕಾರ್ಯನಿರ್ವಹಿಸಲಿದೆ.
ಎಸ್ಐಟಿಗೆ ಪೊಲೀಸ್ ಠಾಣೆಯ ಸ್ಥಾನ ನೀಡಿ, ಇಡೀ ರಾಜ್ಯದ ವ್ಯಾಪ್ತಿಯಲ್ಲಿ ತನಿಖೆ ನಡೆಸುವ ಅಧಿಕಾರ ನೀಡಲಾಗಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (26/2023), ಬೇರೆ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ದೂರುಗಳು ಮತ್ತು ಮುಂದೆ ದಾಖಲಾಗಿರುವ ದೂರುಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.