
ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ ಬೇಡಿಕೆಯಂತೆ, ಅಖಿಲ ಭಾರತ ಮಹಿಳಾ ಜಾನಪದ ಉತ್ಸವವನ್ನು ರಾಜ್ಯದಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.
ಕರ್ನಾಟಕ ಜಾನಪದ ಅಕಾಡೆಮಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರಿಗೆ 2025ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ತಜ್ಞ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ಗ್ರಾಮೀಣ ಭಾಗದಲ್ಲಿ ಜೀವಂತವಾಗಿರುವ ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಯುವ ಸಮುದಾಯ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದೆ. ಬೀಸುಕಲ್ಲಿನ ಹಾಡು, ಸೋಬಾನೆ ಪದ, ಮದುವೆ ಸಮಾರಂಭದ ವೇಳೆ ಅರಿಷಿಣ ಹಚ್ಚುವ ಹಾಡು ಎಲವನ್ನೂ ನಾವು ಮರೆತಿದ್ದೇವೆ. ನಾಡಿನ ಕಲೆ, ಸಂಸ್ಕೃತಿ ಉಳಿಗೆ ಸರ್ಕಾರ ಬದ್ಧವಾಗಿದೆ’ ಎಂದರು.
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ‘ನಮ್ಮ ಮೂಲವನ್ನು ಮರೆತು ನಾವು ಮಾಯಾಲೋಕದಲ್ಲಿ ವಿಹರಿಸುತ್ತಿದ್ದೇವೆ. ಈ ನೆಲದ ಪದ ಜಾನಪದವಾಗಿದೆ. ಜಾನಪದದಲ್ಲಿ ವಿವೇಕ, ನಮ್ರತೆ, ಸಮಸಂಸ್ಕೃತಿ ಎಲ್ಲವೂ ಮೇಳೈಸಿದೆ. ಆದರೆ ನಾವೀಗ ಮಂಟೇ ಸ್ವಾಮಿ ಪದ, ಬಸವಣ್ಣ ಮತ್ತು ಅಂಬೇಡ್ಕರ್ ಅವರನ್ನ ನಾವು ಗಾಜಿನ ಮನೆಯಲ್ಲಿಟ್ಟಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.
ಯುವ ಸಮುದಾಯವನ್ನು ಜಾನಪದಕ್ಕೆ ಮರಳಿತರುವ ನಿಟ್ಟಿನಲ್ಲಿ ಅಕಾಡೆಮಿ ಯೋಜನೆ ರೂಪಿಸಿದೆ. ಕಾಲೇಜಿನ ಕಡೆಗೆ ಜಾನಪದ ಅಕಾಡೆಮಿ ಎಂಬ ಕಾರ್ಯಕ್ರಮ ರೂಪಿಸಿದೆ. ಹಟ್ಟಿಗಳಿಗೆ ದನಿಯಾಗಲು ಹಟ್ಟಿ ಅರಿವು ಕಾರ್ಯಕ್ರಮ ರೂಪಿಸಲಾಗಿದ್ದು ಚಿತ್ರಸಂತೆಯ ರೀತಿಯಲ್ಲಿ ಜನಪದ ಸಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ, ಮಂಡ್ಯ ಜಿಲ್ಲೆಯ ಪಟಕುಣಿತ ಕಲಾವಿದ ಕದಲಗೆರೆ ಶಿವಣ್ಣಗೌಡ, ಬಿಬಿಎಂಪಿ ಮಾಜಿ ಸದಸ್ಯ ಎಂ. ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ.ಎಸ್. ಮಂಜುನಾಥ ಸ್ವಾಮಿ, ಅಕಾಡೆಮಿ ರಿಜಿಸ್ಟ್ರಾರ್ ನಮ್ರತ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.