ಬೆಂಗಳೂರು: ಕೋವಿಡ್ನಿಂದ ಮುಚ್ಚಿರುವ ಕಾಲೇಜುಗಳನ್ನು ಪುನರಾರಂಭಿಸುವ ಉದ್ದೇಶದಿಂದ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಜುಲೈನಲ್ಲಿ ಲಸಿಕೆ ನೀಡಲಾಗುವುದೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ವಿಚಾರವಾಗಿ ಹೇಳಿಕೆ ನೀಡಿರುವ ಅವರು, 'ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿಯು ಮೂರನೇ ಅಲೆ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡ ವರದಿ ಸಲ್ಲಿಸಿದೆ. ಮೊದಲು ಪದವಿ ಕಾಲೇಜುಗಳನ್ನು ತೆರೆಯಲು ವರದಿಯು ಶಿಫಾರಸು ಮಾಡಿದೆ. ಜುಲೈನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು, ನಂತರ ತರಗತಿಗಳು ಪ್ರಾರಂಭವಾಗಲಿವೆ' ಎಂದು ಮಾಹಿತಿ ನೀಡಿದ್ದಾರೆ.
'ಮರಳಿ ಕಾಲೇಜಿಗೆ' ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳನ್ನು ಮತ್ತೆ ಕಾಲೇಜುಗಳಿಗೆ ಕರೆತರುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.
'ಕಾಲೇಜುಗಳನ್ನು ತೆರೆಯುವ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗಾಗಿ ಸರ್ಕಾರ ಕಾಯುತ್ತಿದೆ. ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಪ್ರಕ್ರಿಯೆ ಈಗಾಗಲೇ ಆದ್ಯತೆಯ ಆಧಾರದ ಮೇಲೆ ನಡೆಯುತ್ತಿದೆ' ಎಂದು ಡಿಸಿಎಂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.