ADVERTISEMENT

ನ್ಯಾಯಾಂಗ ನಿಂದನೆ ಆರೋಪ: ಅರಣ್ಯಾಧಿಕಾರಿ ಖುದ್ದು ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 20:12 IST
Last Updated 21 ಫೆಬ್ರುವರಿ 2024, 20:12 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶವನ್ನು ಮಾನ್ಯ ಮಾಡದೆ, ಅರಣ್ಯ ಒತ್ತುವರಿ ಆರೋಪದಡಿ ಸಾಗುವಳಿ ಚೀಟಿ ಹೊಂದಿದ ರೈತರ ಮಾವಿನ ತೋಪುಗಳನ್ನು ತೆರವುಗೊಳಿಸಿದ ಆರೋಪಕ್ಕೆ ಗುರಿಯಾಗಿರುವ ಅರಣ್ಯಾಧಿಕಾರಿಗಳ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಉಪ್ಪಾರಪಲ್ಲಿಯ ಗುಲ್ಜಾರ್‌ ಪಾಷ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್‌, ‘ರೈತರ ಮಾವಿನ ತೋಪಿನಲ್ಲಿನ ಮರಗಳನ್ನು ಕತ್ತರಿಸದಂತೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಆದರೂ, ಅರಣ್ಯಾಧಿಕಾರಿಗಳು ಒತ್ತುವರಿ ಆರೋಪದಡಿ 1 ಲಕ್ಷ 30 ಸಾವಿರಕ್ಕೂ ಹೆಚ್ಚಿನ ಮರಗಳನ್ನು ಕಡಿಯಲು ಕಾರಣವಾಗಿದ್ದಾರೆ’ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ವಿ.ರೋಣ ಅವರು ಅರ್ಜಿದಾರರ ಪರ ಆಕ್ಷೇಪಣೆಯನ್ನು ಬಲವಾಗಿ ಅಲ್ಲಗಳೆದರು. ‘ಕರ್ನಾಟಕ ಅರಣ್ಯ ಕಾಯ್ದೆ–1963ರ ಕಲಂ 64–ಎ ಅನುಸಾರ ಅರ್ಜಿದಾರರಿಗೆ ನೋಟಿಸ್‌ ನೀಡಿ ತೆರವಿಗೆ ಸೂಚಿಸಲಾಗಿದೆ. ಈ ಕುರಿತು 2015ರಲ್ಲೇ ತೆರವು ಆದೇಶ ಪ್ರಕಟಿಸಲಾಗಿದೆ. ಅರ್ಜಿದಾರರು ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿಲ್ಲ. ಅಂತೆಯೇ, ಅರಣ್ಯ ಪ್ರದೇಶದಲ್ಲಿ ಮಾವಿನ ತೋಪು ಬೆಳೆಸಲು ಅವಕಾಶವಿಲ್ಲ. ಭಾವನಾತ್ಮಕವಾಗಿ ಮರ ಕತ್ತರಿಸಿದ್ದಾರೆ ಎಂಬುದಕ್ಕಿಂತಲೂ ಅರಣ್ಯ ಸಂಪತ್ತು ರಕ್ಷಣೆಯ ಬಗ್ಗೆಯೂ ನ್ಯಾಯಪೀಠ ಗಮನಿಸಬೇಕು’ ಎಂದು ಕೋರಿದರು.

ಇದಕ್ಕೆ ನ್ಯಾಯಪೀಠ, ‘ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ, ಅದನ್ನು ಸ್ವಾಧೀನಕ್ಕೆ ತೆಗೆದುಕೊಳ್ಳಬೇಕಿತ್ತು. ಅದು ಬಿಟ್ಟು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುವ ಸಂದರ್ಭದಲ್ಲಿ ಅನುಮತಿ ಪಡೆಯದೇ ಸಾವಿರಾರು ಮರಗಳನ್ನು ಏಕೆ ಕತ್ತರಿಸಲಾಗಿದೆ? ಎಂದು ಖಾರವಾಗಿ ಪ್ರಶ್ನಿಸಿತಲ್ಲದೆ, ಪ್ರಕರಣದ ಪ್ರತಿವಾದಿಗಳಾದ ಕೋಲಾರ ಜಿಲ್ಲೆ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲ ಮತ್ತು ವಲಯ ಅರಣ್ಯಾಧಿಕಾರಿ ಖುದ್ದು ಹಾಜರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು. 

ಆರೋಪ ಏನು?: ’ಪ್ರಕರಣದ ಪ್ರತಿವಾದಿಗಳೂ ಆದ ಅರಣ್ಯ ಅಧಿಕಾರಿಗಳು ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಶ್ರೀನಿವಾಸಪುರ ತಾಲ್ಲೂಕಿನ ಪಾಳ್ಯ, ಯಲವಳ್ಳಿ, ಕೇತಗಾನಹಳ್ಳಿ, ಚಿಂತೆ ಕುಂಟೆ, ನಾರಮಾಕಲ ಹಳ್ಳಿ, ಉಪ್ಪರಹಳ್ಳಿ, ಕೋಟಬಲ್ಲಪಲ್ಲಿ, ಇಲದೋಣಿ, ಲಕ್ಷ್ಮೀಪುರ, ಪಾತಪಲ್ಲಿ, ದ್ವಾರಸಂದ್ರ, ಆಲಂಬಗಿರಿ, ಸುಣ್ಣಕಲ್ಲು, ಜಿಂಕಲವಾರಿಪಲ್ಲಿ ಸೇರಿದಂತೆ ಮುಂತಾದ ಕಡೆ 1 ಲಕ್ಷ 30 ಸಾವಿರಕ್ಕೂ ಹೆಚ್ಚಿನ ಮರಗಳನ್ನು ಕಡಿಯಲು ಕಾರಣವಾಗಿದ್ದಾರೆ‘ ಎಂಬುದು ಅರ್ಜಿದಾರ ಆರೋಪ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.