ಹೈಕೋರ್ಟ್
ಬೆಂಗಳೂರು: ‘ಕಾವಲ್ ಬೈರಸಂದ್ರದಲ್ಲಿರುವ ದಾರುಲ್ ಉಲೂಮ್ ಸಯಿದಿಯಾ ಮುಸ್ಲಿಂ ಅನಾಥಾಲಯ ಹಾಗೂ ಮದರಸಾದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿವೆ’ ಎಂಬ ಹೇಳಿಕೆ ನೀಡಿದ ಆರೋಪದಡಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನುಂಗೊ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಪ್ರಿಯಾಂಕ್ ಕಾನುಂಗೊ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಫಿರ್ಯಾದುದಾರರ ಪರ ವಕೀಲರು, ‘ಪ್ರಿಯಾಂಕ ಕಾನುಂಗೊ ಹಾಗೂ ಇತರರು ತಮ್ಮನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದವರು ಎಂದು ಹೇಳಿಕೊಂಡು 2023ರ ನವೆಂಬರ್ 19ರಂದು ಮದರಸಾದೊಳಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ನಂತರ ಇಲ್ಲಿನ ಕೆಲವು ಫೋಟೊಗಳನ್ನು ತೆಗೆದುಕೊಂಡು ಹೋಗಿ ಇಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ’ ಎಂದರು.
ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ದೂರು ಹಾಗೂ ಟ್ವೀಟ್ ಅನ್ನು ತಪ್ಪಾಗಿ ಅನುವಾದಿಸಲಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.
ಅತಿಕ್ರಮ ಪ್ರವೇಶದ ಆರೋಪ ಹೊರಿಸಿ ಅನಾಥಾಲಯ ಮತ್ತು ಮದರಸಾದ ಕಾರ್ಯದರ್ಶಿ ಅಶ್ರಫ್ ಖಾನ್ ದೇವರಜೀವನಹಳ್ಳಿ ಪೊಲೀಸ್ ಠಾಣೆಯಲ್ಲಿ 2023ರ ನವೆಂಬರ್ 21ರಂದು ಪ್ರಿಯಾಂಕ್ ಕಾನುಂಗೊ ವಿರುದ್ಧ ದೂರು ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.