ADVERTISEMENT

7ನೇ ವೇತನ ಆಯೋಗ ಜಾರಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಿ: ಸರ್ಕಾರಿ ನೌಕರರ ಒಕ್ಕೂಟ

ಫೆ. 7ಕ್ಕೆ ವಿಧಾನಸೌಧ ಚಲೋ– ರಾಜ್ಯ ಸರ್ಕಾರಿ ನೌಕರರ ಒಕ್ಕೂಟ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 19:46 IST
Last Updated 25 ಜನವರಿ 2023, 19:46 IST
   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನಂತೆ ಹೆಚ್ಚಿನ ವೇತನ ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಆಗ್ರಹಿಸಿದೆ.

‘ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸಿ, ನಿಶ್ಚಿತ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್‌) ಕೂಡಲೇ ಜಾರಿಗೊಳಿಸಬೇಕು ಎನ್ನುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ.7ರಂದು ವಿಧಾನಸೌಧ ಚಲೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ಅಧ್ಯಕ್ಷ ಜೈಕುಮಾರ್ ಎಚ್.ಎಸ್. ಬುಧವಾರ
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಪಕ್ಕದ ರಾಜ್ಯಗಳ ಹಾಗೂ ಹೈಕೋರ್ಟ್‌ನ ನೌಕರರ ವೇತನಕ್ಕೂ ರಾಜ್ಯದ ನೌಕರರ ವೇತನಕ್ಕೂ ಕನಿಷ್ಠ 40ರಷ್ಟು ವ್ಯತ್ಯಾಸವಿದೆ. ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಹೋಲಿಸಿದರೂ ಇದೇ ಸ್ಥಿತಿ ಇದೆ. ಇದನ್ನು ಸರಿಪಡಿಸಬೇಕು. ರಾಜ್ಯದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಆಡಳಿತ ಸುಧಾರಣೆಯ ನೆಪದಲ್ಲಿ ಶಿಫಾರಸು ಮಾಡಲಾಗಿರುವ ಹುದ್ದೆಗಳ ಕಡಿತ ಮತ್ತು ಸರ್ಕಾರಿ ಸೇವೆಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಸುಪ್ರಿಂ ಕೋರ್ಟ್‌ ಆದೇಶದಂತೆ ಗುತ್ತಿಗೆ ಆಧಾರಿತ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದರ ಜೊತೆಗೆ ನೇರ ನೇಮಕಾತಿಯಲ್ಲಿ ಅವರಿಗೆ ಪ್ರಾತಿನಿಧ್ಯ ನೀಡಬೇಕು’ ಎಂದರು.

ADVERTISEMENT

‘ಸರ್ಕಾರ ಕೋವಿಡ್‌ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ 18 ತಿಂಗಳ ತುಟ್ಟಿ ಭತ್ಯೆಯನ್ನು ಬಿಡುಗಡೆಗೊಳಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಶಿಕ್ಷಣದ ಖಾಸಗೀಕರಣಕ್ಕೆ ಕಡಿವಾಣ ಹಾಕಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.