ADVERTISEMENT

ಅಂಬೇಡ್ಕರ್ ಚಿಂತನೆಗಳು ಪ್ರಜಾಪ್ರಭುತ್ವದ ಆತ್ಮವಿದ್ದಂತೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 8:17 IST
Last Updated 14 ಏಪ್ರಿಲ್ 2022, 8:17 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗದಲ್ಲಿರುವ ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗದಲ್ಲಿರುವ ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.   

ಬೆಂಗಳೂರು: ಸಂವಿಧಾನ ನಿರ್ಮಾತೃ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಭಾರತದ ಪ್ರಜಾಪ್ರಭುತ್ವದ ಆತ್ಮವಿದ್ದಂತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ತಮ್ಮ ಜೀವನಾನುಭವ, ಅಧ್ಯಯನ ಮತ್ತು ಜ್ಞಾನವನ್ನು ಸಂವಿಧಾನದಲ್ಲಿ ಅಳವಡಿಸಿದರು. ಆ ಕಾರಣದಿಂದಾಗಿಯೇ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ. ದೇಶ ಈಗ ಸಾಧಿಸಿರುವ ಪ್ರಗತಿಯಲ್ಲಿ ಅಂಬೇಡ್ಕರ್ ಕೊಡುಗೆ ದೊಡ್ಡದು ಎಂದರು.

ADVERTISEMENT

ಶೋಷಿತ ಸಮುದಾಯಗಳು ಮತ್ತು ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಪಡೆಯಬೇಕು ಎಂಬುದು ಅಂಬೇಡ್ಕರ್ ನಿಲುವಾಗಿತ್ತು. ಅದಕ್ಕೆ ಪೂರಕವಾಗಿ ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ.‌ ಸ್ತ್ರೀ ಶಕ್ತಿ ಸಂಘಗಳಿಗೆ ನೆರವು ನೀಡಲು ಆ್ಯಂಕರ್ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ಅಂಬೇಡ್ಕರ್ ಹೆಸರಿನಲ್ಲಿ 100 ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಶೋಷಿತ ಸಮುದಾಯಗಳ ಅಭಿವೃದ್ಧಿ ಬಾವುಟ, ಭಾಷಣ, ಘೋಷಣೆಗೆ ಸೀಮಿತವಾಗಬಾರದು. ಕೃತಿಯಲ್ಲಿ ಅದನ್ನು ಸಾಬೀತು ಮಾಡಬೇಕು. ರಾಜಕೀಯ ಸ್ವಾರ್ಥ ಸಾಧನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರನ್ನು ದುರ್ಬಳಕೆ ಮಾಡಿಕೊಳ್ಳುವುದು ಅಪರಾಧ ಎಂದರು.

ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ ಜನರ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಉತ್ತೇಜನ ನೀಡುತ್ತಿದೆ. ಅವರಿಗೆ ಮೀಸಲಾದ ಸ್ವಯಂ ಉದ್ಯೋಗ, ಭೂ ಒಡೆತನ ಯೋಜನೆಗಳ ಸಹಾಧನ ಹಾಗೂ ಸಾಲದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಎಂದರು.

ಛಲವಾದಿ ಗುರು ಪೀಠದ ಬಸವ ನಾಗಿದೇವ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣ ಸ್ವಾಮಿ, ಪ್ರತಾಪಸಿಂಹ ನಾಯಕ್, ಎಚ್.ಎಂ. ರಮೇಶ್ ಗೌಡ ಇದ್ದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಐವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. 139 ಪೌರ ಕಾರ್ಮಿಕರನ್ನು ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.