ADVERTISEMENT

ಅಮೃತ ನಗರೋತ್ಥಾನ: ₹503 ಕೋಟಿ ಮೊತ್ತದ ಕ್ರಿಯಾಯೋಜನೆಗಳಿಗೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 9:26 IST
Last Updated 3 ಜೂನ್ 2022, 9:26 IST
ಅಮೃತ ನಗರೋತ್ಥಾನ: ₹503 ಕೋಟಿ ಮೊತ್ತದ ಕ್ರಿಯಾಯೋಜನೆಗಳಿಗೆ ಅನುಮೋದನೆ
ಅಮೃತ ನಗರೋತ್ಥಾನ: ₹503 ಕೋಟಿ ಮೊತ್ತದ ಕ್ರಿಯಾಯೋಜನೆಗಳಿಗೆ ಅನುಮೋದನೆ   

ಬೆಂಗಳೂರು: ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತದಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಿರುವ ₹ 503.25 ಕೋಟಿ ಮೊತ್ತದ ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ಪೌರಾಡಳಿತ ಇಲಾಖೆಯ ಉನ್ನತಮಟ್ಟದ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ.

ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ರಾಜ್ಯ ಮಟ್ಟದ ಸಮಿತಿ ಸಭೆಯು ಒಂಬತ್ತು ಜಿಲ್ಲೆಗಳ ಕ್ರಿಯಾ ಯೋಜನೆಗಳಿಗೆ ಒಪ್ಪಿಗೆ ನೀಡಿತು.

ಚಿಕ್ಕಮಗಳೂರು ಜಿಲ್ಲೆಯ ₹80.75 ಕೋಟಿ, ಬೆಂಗಳೂರು ನಗರ ಜಿಲ್ಲೆಯ ₹123.25 ಕೋಟಿ, ಕೋಲಾರ ಜಿಲ್ಲೆಯ ಬಂಗಾರಪೇಟೆ ಪುರಸಭೆಯಲ್ಲಿ ₹8.5 ಕೋಟಿ, ತುಮಕೂರು ಜಿಲ್ಲೆಯಲ್ಲಿ (ತಿಪಟೂರು ನಗರ ಸಭೆ ಮತ್ತು ಹುಳಿಯಾರು ಪಟ್ಟಣ ಪಂಚಾಯಿತಿ ಹೊರತು ಪಡಿಸಿ) ₹72.25 ಕೋಟಿ, ರೂಪಾಯಿ, ಹಾಸನ ನಗರ ಸಭೆಗೆ ಹೆಚ್ಚುವರಿ ಮೊತ್ತ ₹6 ಕೋಟಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪುರಸಭೆಗೆ ₹8.5 ಕೋಟಿ, ಉತ್ತರ ಕನ್ನಡ ಜಿಲ್ಲೆಯ ಕಾರವಾರ,ದಾಂಡೇಲಿ, ಕುಮಟ,ಅಂಕೋಲ,ಹೊನ್ನಾವರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ₹80.75 ಕೋಟಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ₹97.75 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಇದರಿಂದಾಗಿ ಈವರೆಗೆ ರಾಜ್ಯದ 291 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಿರುವ ₹ 2993 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ. ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ನಾಲ್ಕನೇ ಹಂತದ ಯೋಜನೆಯಡಿ 3885 ಕೋಟಿ ಮೊತ್ತದ ಕಾಮಗಾರಿ ಕೈಗೊಳ್ಳಲು ಸಚಿವ ಸಂಪುಟ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಜಿಲ್ಲಾಧಿಕಾರಿಗಳ ಮೂಲಕ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಿದ್ದವು.



ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.