ADVERTISEMENT

ಗ್ರಾಚ್ಯುಟಿಗಾಗಿ ಅಂಗನವಾಡಿ ನೌಕರ ಪ್ರತಿಭಟನೆ

‘ಅಂಗನವಾಡಿ: ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿ’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 20:09 IST
Last Updated 1 ಡಿಸೆಂಬರ್ 2022, 20:09 IST
ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ನೌಕರರು ಗುರುವಾರ ಪ್ರತಿಭಟನೆ ವೇಳೆ ಸರ್ಕಾರ ನೀಡಿರುವ ಹಾಳಾದ ಮೊಬೈಲ್‌ಗಳನ್ನು ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ
ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ನೌಕರರು ಗುರುವಾರ ಪ್ರತಿಭಟನೆ ವೇಳೆ ಸರ್ಕಾರ ನೀಡಿರುವ ಹಾಳಾದ ಮೊಬೈಲ್‌ಗಳನ್ನು ಪ್ರದರ್ಶಿಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದಂತೆ ಅಂಗನವಾಡಿ ನೌಕರರಿಗೂ ಗ್ರಾಚ್ಯುಟಿ ಪಾವತಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರು ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‌ಪ್ರತಿಭಟನೆ ನಡೆಸಿದರು.

‘ಅಂಗನವಾಡಿ ನೌಕರರು ಗ್ರಾಚ್ಯುಟಿಗೆ ಅರ್ಹರು’ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್‌ ಏಪ್ರಿಲ್‌ನಲ್ಲಿ ನೀಡಿದೆ. ನಿವೃತ್ತಿ ಹೊಂದಿರುವ ಸಾವಿರಾರು ಅಂಗನವಾಡಿ ನೌಕರರು ಅರ್ಜಿ ಸಲ್ಲಿಸಿದ್ದು, ಅದನ್ನು ಕೆಲವೆಡೆ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಈ ಅರ್ಜಿದಾರರಿಗೆ ಕೂಡಲೇ ಗ್ರಾಚ್ಯುಟಿ ಪಾವತಿಸಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಬೇಕು. ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಒತ್ತಾಯಿಸಿದರು.

ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆ ತನಕ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಸಮಯ ನಿಗದಿ ಮಾಡಬೇಕು. ಆ ಮೂಲಕ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಬದಲಿಸಬೇಕು. ಈ ಸಮಯದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸಾರ್ವಜನಿಕರ ಭೇಟಿಗೆ ಅವಕಾಶ ಇಲ್ಲ ಎಂಬುದನ್ನು ಖಚಿತಪಡಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ನ್ಯಾಯಯುತ ಮುಂಬಡ್ತಿಗಳನ್ನುನೀಡಬೇಕು, ನೌಕರರ ಮೇಲೆ ಹೆಚ್ಚುತ್ತಿರುವ ಶಿಸ್ತು ಕ್ರಮಗಳ ಕಡಿಮೆ ಮಾಡಬೇಕು. ಉಚಿತ ಕೆಲಸ ನಿಲ್ಲಿಸಿ, ಸಮಯಕ್ಕೆ ಸರಿಯಾಗಿ ವೇತನ ಪಾತಿಸಬೇಕು ಎಂದು ಒತ್ತಾಯಿಸಿದರು.

‘ಮನವಿ ಪತ್ರಗಳನ್ನು ಅಧಿಕಾರಿಗಳು ಪಡೆದಿದ್ದಾರೆ. ಬೇಡಿಕೆಗಳ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ವರಲಕ್ಷ್ಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.