ಸಿದ್ದರಾಮಯ್ಯ
ಬೆಂಗಳೂರು: ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕದ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಗೋವಾ ಪ್ರಭಾರಿಯೂ ಆಗಿರುವ ಡಾ.ಅಂಜಲಿ ನಿಂಬಾಳ್ಕರ್ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಮೆರಿಕದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಅಂಜಲಿ ಅವರು ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು ಎಂದಿದ್ದಾರೆ.
ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ. ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.