ಬೆಂಗಳೂರು: ‘ಹನುಮ ಜಯಂತಿ ವೇಳೆಗೆ ಅಂಜನಾದ್ರಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆ ಹೊತ್ತಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಅವರ ಕಾವೇರಿ ನಿವಾಸದಲ್ಲಿ ಬುಧವಾರ ನಡೆದ ಸಭೆಯಲ್ಲಿ, ಅಂಜನಾದ್ರಿ ಬೆಟ್ಟದಲ್ಲಿನ ಅಭಿವೃದ್ಧಿ ಕಾಮಗಾರಿಗಳ ವಿವರಗಳನ್ನು ಅಧಿಕಾರಿಗಳು ಒದಗಿಸಿದರು. ಅದನ್ನು ಪರಿಶೀಲಿಸಿದ ಸಿದ್ದರಾಮಯ್ಯ ಅವರು, ‘ಯಾವೆಲ್ಲಾ ಸವಲತ್ತುಗಳನ್ನು ಒದಗಿಸಲು ಸಾಧ್ಯವಾಗುತ್ತದೆಯೋ, ಆ ಸಂಬಂಧ ಶೀಘ್ರ ಕ್ರಮ ತೆಗೆದುಕೊಳ್ಳಿ’ ಎಂದು ಸೂಚಿಸಿದರು.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ 1 ಮತ್ತು 2ನೇ ಹಂತದಲ್ಲಿ ಒಟ್ಟು ₹200 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಅದರಲ್ಲಿ ₹10 ಕೋಟಿಯನ್ನಷ್ಟೇ ಈವರೆಗೆ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವ ಅನುದಾನವನ್ನು ಹಂತ–ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಕ್ಷೇತ್ರದಲ್ಲಿ ಕೆಲವು ಕಾಮಗಾರಿಗಳನ್ನು ನಡೆಸಲು ಸರ್ಕಾರಿ ಜಮೀನಿನ ಕೊರತೆ ಇದೆ. ಖಾಸಗಿಯವರಿಂದ ಜಮೀನು ಖರೀದಿಸಲು ಅನುದಾನದ ಕೊರತೆ ಇದೆ ಎಂಬುದನ್ನು ಅಧಿಕಾರಿಗಳು ಮುಖ್ಯಮಂತ್ರಿಯ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ರೋಪ್ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಅಂಜನಾದ್ರಿಗೆ ರೋಪ್ವೇ ನಿರ್ಮಾಣ ಯೋಜನೆಯ ಸ್ಥಿತಿ ಬಗ್ಗೆ ಪರಿಶೀಲನೆ
ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಕಾಮಗಾರಿಗೆ ಅನುಮತಿ ಪಡೆದುಕೊಳ್ಳಲು ಸೂಚನೆ
ಮೆಟ್ಟಿಲು, ಸಮುದಾಯ ಭವನ, ಶೌಚಾಲಯ ಮತ್ತಿತರ ಮೂಲಸೌಕರ್ಯ ಒದಗಿಸಲು ಸೂಚನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.