ಅಣ್ಣಾಮಲೈ
ಉಡುಪಿ: 'ನಾನೊಬ್ಬ ಕಾರ್ಯಕರ್ತ. ಪಕ್ಷ ನನಗೆ ಒಂದು ಜವಾಬ್ದಾರಿ ಕೊಟ್ಟಿತ್ತು, ಅದನ್ನು ನಿಭಾಯಿಸಿದ್ದೇನೆ. ಇನ್ನೊಂದು ಜವಾಬ್ದಾರಿ ಕೊಟ್ಟರು ಕೆಲಸ ಮಾಡುತ್ತೇನೆ' ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದರು.
ಸುದ್ದಿಗಾರರೊಂದಿಗೆ ಬುಧವಾರ ಇಲ್ಲಿ ಮಾತನಾಡಿದ ಅವರು, 'ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿನ ವಿರೋಧ ಪಕ್ಷದ ನಾಯಕ ಪಳನಿ ಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಮೈತ್ರಿಯ ಬಗ್ಗೆಯೂ ಮಾತನಾಡಿದ್ದಾರೆ. ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮೆಲ್ಲರ ಉದ್ದೇಶ’ ಎಂದರು.
‘ಎಐಎಡಿಎಂಕೆ ಕುರಿತ ನನ್ನ ನಿಲುವು ಎಲ್ಲರಿಗೂ ಗೊತ್ತಿದೆ. ಎಐಎಡಿಎಂಕೆ ಬಿಜೆಪಿ ಜೊತೆ ಮೈತ್ರಿ ಬಯಸುತ್ತಿದೆ. ನಾನು ಎಲ್ಲಿ ಇರಬೇಕು, ಯಾವ ಸ್ಥಾನದಲ್ಲಿರಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ. ಮೈತ್ರಿಗೆ ಯಾವುದು ಸರಿಯಾದ ನಿಲುವು ಎಂಬುದು ಕೂಡ ಪಕ್ಷಕ್ಕೆ ಗೊತ್ತಿದೆ‘ ಎಂದು ಹೇಳಿದರು.
‘ರಾಜಕೀಯದಲ್ಲಿ ಅಧಿಕಾರಕ್ಕಿಂತ ತಾಳ್ಮೆ ಮುಖ್ಯ. ತಾಳ್ಮೆಯಿಂದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದಲ್ಲ ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ‘ ಎಂದರು.
‘ಕರ್ನಾಟಕದ ಸರ್ಕಾರ ಜನ ವಿರೋಧಿಯಾಗಿದೆ. ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಏನೆಲ್ಲ ಮಾಡುತ್ತಿದೆ ಎಂಬುದನ್ನು ಇಡೀ ದೇಶ ನೋಡ್ತಾ ಇದೆ. ಬಿಜೆಪಿ ಜನಾಕ್ರೋಶ ಯಾತ್ರೆಗೆ ಜನರು ಜೊತೆಯಾಗಬೇಕು‘ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.