ADVERTISEMENT

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ?

​ಪ್ರಜಾವಾಣಿ ವಾರ್ತೆ
Published 27 ಮೇ 2019, 18:08 IST
Last Updated 27 ಮೇ 2019, 18:08 IST
ಕೆ.ಅಣ್ಣಾಮಲೈ
ಕೆ.ಅಣ್ಣಾಮಲೈ   

ಬೆಂಗಳೂರು: ರಾಜ್ಯದ ಖಡಕ್ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.

‘ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ಆಗಿ ಕೆಲಸ ಮಾಡುತ್ತಿರುವ ಅಣ್ಣಾಮಲೈ ಅವರು ಸದ್ಯದಲ್ಲೇ ಗೃಹ ಇಲಾಖೆಯ ಕಾರ್ಯದರ್ಶಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ’ ಎಂದು ಅವರ ಆಪ್ತ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.

‘ಚಿಕ್ಕಮಗಳೂರು ಎಸ್ಪಿ ಆಗಿದ್ದ ಅವರನ್ನು 2018ರ ಅಕ್ಟೋಬರ್‌ನಲ್ಲಿ ಬೆಂಗಳೂರಿಗೆ ವರ್ಗಾಯಿಸಲಾಗಿತ್ತು. ಅಧಿಕಾರ ವಹಿಸಿಕೊಂಡ ನಂತರ ಹಲವು ಕಾರ್ಯಾಚರಣೆ ಮೂಲಕ ಅಪರಾಧಗಳನ್ನು ನಿಯಂತ್ರಿಸಿದ್ದರು. ಇತ್ತೀಚಿನ ಕೆಲ ಬದಲಾವಣೆಗಳಿಂದ ಬೇಸರಗೊಂಡಿರುವ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ADVERTISEMENT

ರಾಜಕೀಯಕ್ಕೆ ಪ್ರವೇಶ: ‘ಹುದ್ದೆಗೆ ರಾಜೀನಾಮೆ ನೀಡುವ ಸಂಬಂಧ ಕಳೆದ ಆರು ತಿಂಗಳಿನಿಂದಲೇ ಅಣ್ಣಾಮಲೈ ಅವರು ಚಿಂತನೆ ನಡೆಸುತ್ತಿದ್ದರು. ರಾಜೀನಾಮೆ ನೀಡಿದ ಬಳಿಕ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಈಗಾಗಲೇ ತಮಿಳುನಾಡಿನ ಕೆಲ ರಾಜಕೀಯ ಮುಖಂಡರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.