ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿ ಕುರಿತ ವಿವಾದ ಬಗೆಹರಿಸಲು ಇರುವ ಶಾಶ್ವತ ಪರಿಹಾರವಾಗಿದೆ. ಈ ಸವಾಲು ಸ್ವೀಕರಿಸಲು ಪ್ರಧಾನಿ ನರೇಂದ್ರ ಮೋದಿ ಸಿದ್ಧವಿದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು. ಇಲ್ಲದಿದ್ದರೆ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಪ್ರಧಾನಿ ಮೋದಿ ಅವರು ಮೀಸಲಾತಿಯ ಸುತ್ತ ವಿವಾದ ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿ ತೊಡಗಿದ್ದಾರೆ. ಮೀಸಲಾತಿಗೆ ಈಗ ಇರುವ ಶೇ 50ರ ಮಿತಿಯನ್ನು 75ಕ್ಕೆ ಹೆಚ್ಚಿಸುವ ಭರವಸೆಯನ್ನು ವಿಧಾನಸಭಾ ಚುನಾವಣೆಯ ನಮ್ಮ ಪ್ರಣಾಳಿಕೆಯಲ್ಲಿಯೇ ಘೋಷಿಸಿದ್ದೆವು. ಅದಕ್ಕೆ ಈಗಲೂ ಬದ್ಧ’ ಎಂದಿದ್ದಾರೆ.
ಆರೆಸ್ಸೆಸ್ ಮತ್ತು ಬಿಜೆಪಿಯು ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವುದನ್ನು ದೇಶದ ಜನ ಗಮನಿಸಿದ್ದಾರೆ. ಮಂಡಲ್ ವರದಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಘೋಷಿಸಿದಾಗಲೂ ಬಿಜೆಪಿ ವಿರೋಧಿಸಿತ್ತು. ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಿದಾಗ ಬಿಜೆಪಿ ನಾಯಕರಾಗಿದ್ದ ರಾಮಾ ಜೋಯಿಸ್ ಅವರು ಅದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು ಎಂದು ಅವರು ಹೇಳಿದ್ದಾರೆ.
ದಲಿತರ ಬಗ್ಗೆ ಬಾಯಿ ಮಾತಿನಲ್ಲಿ ಇಷ್ಟೊಂದು ಕಾಳಜಿ ತೋರಿಸುತ್ತಿರುವ ಮೋದಿ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕಳಿಸಿರುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದು ಏಕೆ ಎನ್ನುವುದನ್ನು ರಾಜ್ಯದ ಜನರಿಗೆ ತಿಳಿಸಬೇಕು.
ಕರ್ನಾಟಕದವರೇ ಆಗಿರುವ ಸಾಮಾಜಿಕನ್ಯಾಯ ಸಚಿವರಾದ ನಾರಾಯಣ ಸ್ವಾಮಿ ಅವರೇ ಮೀಸಲಾತಿ ಹೆಚ್ಚಳದ ಪ್ರಸ್ತಾಪ ನಮ್ಮ ಪರಿಶೀಲನೆಯಲ್ಲಿಯೇ ಇಲ್ಲ ಎಂದು ಹೇಳಿರುವುದು ಪ್ರಧಾನಿಯವರ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.